ಬೆಳಗಾವಿ: ‘ಗಡಿ ಭಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಜೀವನ ವೃತ್ತಾಂತ ಸಾರುವ ಬೃಹತ್ ನಾಟಕ ಪ್ರದರ್ಶನ ಹಮ್ಮಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ’ ಎಂದು ಧಾರವಾಡ ರಂಗಾಯಣದ ನಿರ್ದೇಶಕ ರಮೇಶ ಎಸ್. ಪರವಿನಾಯ್ಕರ ತಿಳಿಸಿದರು.
ಇಲ್ಲಿನ ನೆಹರೂ ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಡೆದ ಪರಿಷತ್ತಿನ 108ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಬೆಳಗಾವಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ನಾಟಕ ಕಲೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಬೇಕು’ ಎಂದು ಆಶಿಸಿದರು.
ಸಾಹಿತಿ ಜಲತ್ಕುಮಾರ್ ಪುನಜಗೌಡ್ರ, ‘ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒಲವು ತೋರಬೇಕು. ಇಲ್ಲಿನ ನೆಲ, ಜಲ, ಕಲೆ ಸಾಹಿತ್ಯದ ಕುರಿತು ವಿಶೇಷ ಗಮನಹರಿಸಬೇಕು. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡಪರ ಹೋರಾಟಗಾರರು ಗಮನಸೆಳೆಯುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಲಿಂಗಾಯತ ಮಹಿಳಾ ಸಮಾಜದ ಸಂಸ್ಥಾಪಕ ಅಧ್ಯಕ್ಷೆ ಶೈಲಜಾ ಬಿಂಗೆ, ‘ಗಡಿಯಲ್ಲಿ ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸುವ–ಬೆಳೆಸುವ ನಿಟ್ಟಿನಲ್ಲಿ ಕೆಲಸಗಳಾಗಬೇಕು’ ಎಂದರು.
ಅಧ್ಯಕ್ಷತೆ ವಹಿಸಿದ್ದ ಲೇಖಕಿ ಡಾ.ಗುರುದೇವಿ ಹುಲೆಪ್ಪನವರಮಠ ಮತ್ತು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಮಾತನಾಡಿದರು.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ಹಂಜಿ, ಸಾಹಿತಿಗಳಾದ ಜ್ಯೋತಿ ಬದಾಮಿ, ವಿದ್ಯಾವತಿ ಜನವಾಡೆ, ಚನ್ನಪ್ಪ ಪಾಟೀಲ,ಮೋಹನಗೌಡ ಪಾಟೀಲ, ಜಿಲ್ಲಾ ಕಾರ್ಯಕಾರಿ ಸಮಿತಿಯ ಪ್ರತಿಭಾ ಕಳ್ಳಿಮಠ, ವೀರಭದ್ರ ಅಂಗಡಿ, ಸುನೀಲ ಹಲವಾಯಿ ಪಾಲ್ಗೊಂಡಿದ್ದರು.
ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ವೈ. ಮೆಣಸಿನಕಾಯಿ ಸ್ವಾಗತಿಸಿದರು. ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಹೇಮಾವತಿ ಸೊನೊಳ್ಳಿ ನಿರೂಪಿಸಿದರು. ಭಾರತಿ ಮಠದ ವಂದಿಸಿದರು.