ಉಗರಗೋಳ: ‘ಯಲ್ಲಮ್ಮನಗುಡ್ಡದಲ್ಲಿ ಕೇಂದ್ರದ ‘ಪ್ರಸಾದ’ ಯೋಜನೆಯಡಿ ₹11 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರ ಕೆಲಸ ಆರಂಭಿಸಲಾಗುವುದು’ ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.
ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಈ ಅನುದಾನದಲ್ಲಿ ಸಾಮೂಹಿಕ ಶೌಚಗೃಹ, ಸ್ನಾನಗೃಹ, ಪ್ರಥಮ ಚಿಕಿತ್ಸಾ ಕೇಂದ್ರ, ಜಾನುವಾರುಗಳಿಗೆ ಪ್ರಥಮ ಚಿಕಿತ್ಸಾ ಕೇಂದ್ರ, ಭಕ್ತರಿಗೆ ಮಾಹಿತಿ ಕೇಂದ್ರ ನಿರ್ಮಾಣ ಮತ್ತಿತರ ಕಾಮಗಾರಿ ಕೈಗೊಳ್ಳಲಾಗುವುದು’ ಎಂದರು.
ಶಾಸಕ ವಿಶ್ವಾಸ ವೈದ್ಯ, ‘ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಸಾಕಷ್ಟು ಅನುದಾನವನ್ನೂ ಕೊಡುತ್ತಿದೆ. ಈಗ ಕೇಂದ್ರದ ಅನುದಾನವೂ ಬಂದಿದ್ದರಿಂದ ಅನುಕೂಲವಾಗಿದೆ. ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗೆ ಬದ್ಧರಿದ್ದೇವೆ’ ಎಂದು ಹೇಳಿದರು.
ಯಲ್ಲಮ್ಮ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಪ್ರೊಬೇಷನರಿ ಐಎಎಸ್ ಅಧಿಕಾರಿ ಶುಭಂ ಶುಕ್ಲಾ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್ಪಿಬಿ ಮಹೇಶ, ವಿರೂಪಾಕ್ಷಿ ಮಾಮನಿ, ರತ್ನಾ ಮಾಮನಿ, ವೈ.ವೈ.ಕಾಳಪ್ಪನವರ ಇದ್ದರು.