ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದ ಆರ್.ಪಿ.ಡಿ. ಕಾಲೇಜಿನಲ್ಲಿ ಸ್ಟ್ರಾಂಗ್ ರೂಂ ನಿರ್ಮಾಣ ಹಾಗೂ ಮತ ಎಣಿಕೆ ಕೇಂದ್ರಗಳ ಸಿದ್ಧತೆಗಳನ್ನು ಚುನಾವಣಾ ಸಾಮಾನ್ಯ ವೀಕ್ಷಕ ಡಾ.ಚಂದ್ರಭೂಷಣ್ ತ್ರಿಪಾಠಿ ಅವರು ಬುಧವಾರ ಪರಿಶೀಲಿಸಿದರು.
ಗುರುತಿಸಲಾಗಿರುವ ಪ್ರತಿಯೊಂದು ಕೊಠಡಿಗಳನ್ನು ಪರಿಶೀಲಿಸಿದ ಅವರು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ನಿರ್ಮಿಸಿರುವುದನ್ನು ಖಚಿತಪಡಿಸಿಕೊಂಡರು. ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್, ‘ಮಾರ್ಗಸೂಚಿ ಪ್ರಕಾರ ನಿಗದಿತ ಅವಧಿಯೊಳಗೆ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು’ ಎಂದು ತಿಳಿಸಿದರು.
‘ಈ ಬಾರಿ ಮತ ಎಣಿಕೆ ವೇಳೆ ಕೋವಿಡ್-19 ಮಾರ್ಗಸೂಚಿಗಳನ್ನು ಕೂಡ ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಭದ್ರತಾ ವ್ಯವಸ್ಥೆ, ಬ್ಯಾರಿಕೇಡಿಂಗ್, ಚುನಾವಣಾ ವೀಕ್ಷಕರ ವಿಶೇಷ ಕೊಠಡಿಗಳು, ಮಾಧ್ಯಮ ಕೇಂದ್ರ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ’ ಎಂದರು.
ನಗರ ಪೊಲೀಸ್ ಆಯುಕ್ತ ಡಾ.ಕೆ. ತ್ಯಾಗರಾಜನ್, ಡಿಸಿಪಿ ಯಶೋದಾ ವಂಟಗೋಡಿ ಇದ್ದರು.