ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಗೆ ನಮ್ಮ ಮತ ಇಲ್ಲ’ ಎಂದು ರೈತ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ತಿಳಿಸಿದರು.
ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಗೆ ನಮ್ಮ ಮತವಿಲ್ಲ ಎನ್ನುವುದು ರೈತ ಚಳವಳಿಯ ಒಂದು ಭಾಗ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂದೇಶ ಕಳುಹಿಸುತ್ತೇವೆ’ ಎಂದರು.
‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಮ್ಮ ಮನೆಗೆ ಬಂದಿದ್ದರು. ಉಪ ಚುನಾವಣೆಯಲ್ಲಿ ಬೆಂಬಲ ಕೋರಿದರು. ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ನಾವು ಈಗಾಗಲೇ ತೀರ್ಮಾನಿಸಿದ್ದೇವೆ ಎಂದು ಅವರಿಗೆ ತಿಳಿಸಿದ್ದೇನೆ. ರೈತರನ್ನು ಕೇಳಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ವಿಷಯಗಳನ್ನು ಸೇರಿಸಬೇಕು ಎಂದು ಹೇಳಿದ್ದೇನೆ.
ಹೈಕಮಾಂಡ್ ಜೊತೆ ಚರ್ಚಿಸುವ ಭರವಸೆ ಕೊಟ್ಟಿದ್ದಾರೆ. ಬಿಜೆಪಿಗೆ ಮತವಿಲ್ಲವೆಂದರೆ, ಕಾಂಗ್ರೆಸ್ ಬೆಂಬಲಿಸುತ್ತೇವೆ ಎಂದು ಸಹಜವಾಗಿಯೇ ಅರ್ಥವಾಗುತ್ತದೆ. ಯಾವುದೇ ಪರಿಸ್ಥಿತಿಯಲ್ಲಿ ಬಿಜೆಪಿ ಸೋಲಿಸಲು ಕೆಲಸ ಮಾಡುತ್ತೇವೆ’ ಎಂದು ಹೇಳಿದರು.
‘ರೈತರ ಉಳಿವಿಗಾಗಿ ಬಿಜೆಪಿ ಸೋಲಿಸಬೇಕಾಗಿದೆ. ಕಾಂಗ್ರೆಸ್ನವರು ಪಾಕಿಸ್ತಾನ ಅಥವಾ ಚೀನಾದಿಂದ ಬಂದಿಲ್ಲ. ಪಕ್ಷಕ್ಕಿಂತ ಕೃಷಿ ಉಳಿಸುವುದು ಮುಖ್ಯವಾಗಿದೆ. ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಬೆಂಬಲಿಸಲು ಆಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.