ಬೆಳಗಾವಿ: ಕೇಂದ್ರ ಸರ್ಕಾರದ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದವನ್ನು (ಆರ್ಸಿಇಪಿ) ವಿರೋಧಿಸಿ ಸಾಮೂಹಿಕ ನಾಯಕತ್ವದ ಸಾರಥ್ಯ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ರೈತರು ನಗರದಲ್ಲಿ ಗುರುವಾರ ಪ್ರತಿಭಟನೆನಡೆಸಿದರು.
ಇಲ್ಲಿನ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ರೈತರಿಗೆ ಮರಣ ಶಾಸನವಾಗಿರುವ ಈ ಒಪ್ಪಂದವನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
‘ಆರ್ಸಿಇಪಿ ಒಪ್ಪಂದ ಜಾರಿಯಾದರೆ ಹೈನೋದ್ಯಮ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ಕುಟುಂಬಗಳು ಬೀದಿಗೆ ಬೀಳಲಿವೆ. ಈ ಒಪ್ಪಂದ ರೈತರು ಹಾಗೂ ಕೃಷಿಯ ಮೇಲೂ ಪರಿಣಾಮ ಬೀರಲಿದೆ. ಒಪ್ಪಂದವನ್ನು ಜಾರಿಗೊಳಿಸದಂತೆ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬೇಕು’ ಎಂದು ರೈತ ಮುಖಂಡ ಚೂನಪ್ಪ ಪೂಜೇರಿ ಒತ್ತಾಯಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಮಂಜು ಗಡಾದಿ, ಜಯಶ್ರೀ ಗುರನ್ನವರ, ಶ್ರೀಶೈಲ ಅಂಗಡಿ ಸೇರಿದಂತೆ ರೈತರು ಇದ್ದರು.