ಬೆಳಗಾವಿ: ‘ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ಕೂಡಲೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಗುರುವಾರ ಪ್ರತಿಭಟನೆ ನಡೆಸಿದರು.
ರಾಣಿ ಚನ್ನಮ್ಮ ವೃತ್ತದಿಂದ ಕಾಡಾ ಕಚೇರಿವರೆಗೆ ಮೆರವಣಿಗೆ ನಡೆಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿಯನ್ನು ಬಿಡಬೇಕು ಎಂದು ಒತ್ತಾಯಿಸಿದರು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಮನವಿ ಸಲ್ಲಿಸಿದರು.
‘ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ಕೈಗಾರಿಕೋದ್ಯಮಿಗಳು ಹಾಗೂ ಕಾರ್ಪೊರೇಟ್ ವಲಯದವರು ಕೃಷಿ ಭೂಮಿಯನ್ನು ಸುಲಭವಾಗಿ ಪಡೆದುಕೊಳ್ಳಲು ಅನುವು ಮಾಡಿಕೊಟ್ಟಿದೆ. ಸಣ್ಣ ರೈತರು ಇನ್ನಷ್ಟು ವ್ಯವಸ್ಥಿತ ಹಾಗೂ ಶಾಸನಬದ್ಧವಾಗಿ ಕೃಷಿಯಿಂದ ದೂರವಾಗಬೇಕಾಗುತ್ತದೆ. ಇಲ್ಲಿನ ಕೃಷಿ ವಲಯದ ಮೇಲೆ ಬಹುರಾಷ್ಟ್ರೀಯ ಕಂಪನಿಗಳ ಹಿಡಿತ ಹೆಚ್ಚಿ ದೇಶದ ಆಹಾರ ಸ್ವಾವಲಂಬನೆ ಮತ್ತು ಸಾರ್ವಭೌಮತೆ ಇಲ್ಲವಾಗುತ್ತಾ ಹೋಗುತ್ತದೆ’ ಎಂದು ರೈತರು ಕಳವಳ ವ್ಯಕ್ತಪಡಿಸಿದರು.
ರಾಜ್ಯ ಘಟಕದ ಸಲಹಾ ಸಮಿತಿ ಸದಸ್ಯರಾದ ಚೂನಪ್ಪ ಪೂಜಾರಿ, ಜಯಶ್ರೀ ಪೂಜಾರಿ, ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ನಾಯಕ, ಮುಖಂಡರಾದ ಅಶೋಕ ಯಮಕನಮರಡಿ, ಪ್ರಕಾಶ ನಾಯಕ ನೇತೃತ್ವ ವಹಿಸಿದ್ದರು.