ಬೆಳಗಾವಿ: ‘ಕನ್ನಡ ಭಾಷೆ ಭವ್ಯವಾದ ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದೆ. ಇದನ್ನು ಉಳಿಸಿ– ಬೆಳೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಯುವ ಜನಾಂಗದ ಮೇಲಿದೆ’ ಎಂದು ಚಿಂತಕ ಹಿರೇಮಗಳೂರು ಕಣ್ಣನ್ ಹೇಳಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ 2019ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಹಾಗೂ ಪ್ರಸಾರಾಂಗ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಕನ್ನಡದ ಉತ್ಸವ ನಿರಂತರವಾಗಿ ನಡೆಯಬೇಕು’ ಎಂದು ಆಶಿಸಿದರು.
ಅಧ್ಯಕ್ಷತೆ ವಹಿಸಿದ್ದ ಕುಲಪತಿ ಡಾ.ಕರಿಸಿದ್ದಪ್ಪ ಮಾತನಾಡಿ, ‘ಕನ್ನಡ ಭಾಷೆ ಅತ್ಯಂತ ಶ್ರೀಮಂತ ಸಾಹಿತ್ಯ ಹಾಗೂ ವೈಚಾರಿಕತೆಯಿಂದ ಕೂಡಿದೆ. ನಮ್ಮ ಮಕ್ಕಳಿಗೆ ಮಾತೃ ಭಾಷೆ ಕನ್ನಡದಲ್ಲಿ ಶಿಕ್ಷಣ ಕೊಡಬೇಕಾದ ಅವಶ್ಯಕತೆ ಇದೆ’ ಎಂದು ತಿಳಿಸಿದರು.
ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಹೂಲಿ ಶೇಖರ, ಡಾ.ಎಸ್.ಆರ್. ಗುಂಜಾಳ, ಶಿವಾಜಿ ಕಾಗಣಿಕರ ಅವರನ್ನು ಸನ್ಮಾನಿಸಲಾಯಿತು.
ಕುಲಸಚಿವ ಡಾ.ಎ.ಎಸ್. ದೇಶಪಾಂಡೆ ಸ್ವಾಗತಿಸಿದರು. ಕುಲಸಚಿವ ಡಾ.ಸತೀಶ ಅಣ್ಣಿಗೇರಿ ವಂದಿಸಿದರು. ಪುಸ್ತಕ ಪ್ರಕಟಣಾ ಸಮಿತಿ ಅಧ್ಯಕ್ಷ ಡಾ.ಸಿ.ಕೆ. ಸುಬ್ಬರಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಪ್ರಾಧ್ಯಾಪಕಿ ಡಾ.ಶಾಂತಾ ನಿರೂಪಿಸಿದರು.