ಬೆಳಗಾವಿ: ‘ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಯಾದರೆ ಆ ಪ್ರದೇಶ ತನ್ನಿಂದ ತಾನೆ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ. ಹಾಗಾಗಿ ಶೈಕ್ಷಣಿಕ ಮೂಲಸೌಕರ್ಯಗಳ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇನೆ’ ಎಂದು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ತಾಲ್ಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಹೆಚ್ಚುವರಿಯಾಗಿ 6 ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ಗ್ರಾಮೀಣ ಕ್ಷೇತ್ರ ಹಿಂದುಳಿಯಲು ಇಲ್ಲಿ ಶೈಕ್ಷಣಿಕ ಸೌಲಭ್ಯಗಳ ಕೊರತೆಯೂ ಕಾರಣವಾಗಿದೆ. ಬಡಜನರೆ ಹೆಚ್ಚಾಗಿರುವ ಈ ಕ್ಷೇತ್ರದಲ್ಲಿ ಮಕ್ಕಳನ್ನು ದೂರದ ಊರಿಗೆ ಕಳುಹಿಸಿ ಶಿಕ್ಷಣ ಕೊಡಿಸುವುದು ಕಷ್ಟ. ಹೀಗಾಗಿ, ಉನ್ನತ ಶಿಕ್ಷಣದಿಂದ ಬಹಳಷ್ಟು ಜನರು, ಅದರಲ್ಲೂ ಹೆಣ್ಣು ಮಕ್ಕಳು ದೂರವೇ ಉಳಿಯುತ್ತಿದ್ದಾರೆ. ಹಾಗಾಗಿ ಪ್ರತಿ ಕ್ಷೇತ್ರದಲ್ಲಿ ಶೈಕ್ಷಣಿಕ ವಾತಾವರಣ ಸುಧಾರಣೆಗೆ ಆದ್ಯತೆ ನೀಡುತ್ತಿದ್ದೇನೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.
ಗ್ರಾಮದ ಮುಖಂಡರಾದ ದತ್ತ ಪಾಟೀಲ, ಜಯರಾಮ ಪಾಟೀಲ, ನಾತಾಜಿ ಪಾಟೀಲ, ರೇಖಾ ಇಂಡಿಕರ್, ಸಿದ್ದರಾಯಿ ಬೆಳಗಾವಿ, ಅಡಿವೆಪ್ಪ ಹತ್ತರಗಿ, ಅರ್ಚನಾ ಪಠಾಣಿ, ಬಂಡೆನವಾಜ್ ಸೈಯದ್, ಉಮೇಶ ಪಾಟೀಲ ಇದ್ದರು.