ಅಥಣಿ: ತಾಲ್ಲೂಕಿನ ಹುಲಗಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಕರ್ಲಟ್ಟಿಯಲ್ಲಿ ನಾಲ್ವರು ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ರಾಷ್ಟ್ರೀಯ ಪಕ್ಷದ ಚಿಹ್ನೆ ಹಾಗೂ ರಾಷ್ಟ್ರೀಯ ನಾಯಕರ ಫೋಟೊ ಬಳಸಿದ್ದಾರೆ. ಆ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ಅವರ ಫೋಟೊ ಬಳಸಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಎಂದು ಪ್ರಚಾರ ನಡೆಸುತ್ತಿದ್ದಾರೆ.
‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಪಕ್ಷ ಹಾಗೂ ನಾಯಕರ ಪೋಟೊ ಬಳಸಿ ಪ್ರಚಾರ ಮಾಡಬಾರದು’ ಎಂದು ಚುನಾವಣಾ ಆಯೋಗ ನಿರ್ದೇಶನ ನೀಡಿದ್ದರೂ, ಅದನ್ನು ಉಲ್ಲಂಘಿಸಿ ಪ್ರಚಾರ ಮಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.
‘ಪಕ್ಷದ ಚಿಹ್ನೆ ಬಳಸಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪ್ರಚಾರ ಮಾಡುವಂತಿಲ್ಲ. ಯಾರಾದರೂ ಈ ಸಂಬಂಧ ದೂರು ನೀಡಿದರೆ ಅಕ್ರಮ ಎಸಗಿದವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ತಾಲ್ಲೂಕು ಚುನಾವಣಾ ಅಧಿಕಾರಿಯಾದ ತಾ.ಪಂ. ಇಒ ರವಿ ಬಂಗಾರಪ್ಪನವರ ಪ್ರತಿಕ್ರಿಯಿಸಿದರು.