ಬೆಳಗಾವಿ: ‘ರಮೇಶ ಜಾರಕಿಹೊಳಿಗೂ ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಂದರೆ ನಾವು ಸ್ವಾಗತಿಸುತ್ತೇವೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಡಾ.ಉಮೇಶ ಜಾಧವ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಇವರಂತೆ ಇನ್ನೂ ಕೆಲವು ಮುಖಂಡರು ಸದ್ಯದಲ್ಲಿಯೇ ಪಕ್ಷ ಸೇರಲಿದ್ದಾರೆ’ ಎಂದು ನುಡಿದರು.
‘ರಮೇಶ ಜಾರಕಿಹೊಳಿ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದರೆ, ಅದು ಕಾಂಗ್ರೆಸ್ ಪಕ್ಷದ ವೈಫಲ್ಯವಾಗಿದೆ. ಇದು ಆ ಪಕ್ಷದ ಆಂತರಿಕ ವಿಷಯವಾಗಿದೆ’ ಎಂದು ಪ್ರತಿಕ್ರಿಯಿಸಿದರು.
‘ಲೋಕಸಭಾ ಚುನಾವಣೆಯ ನಂತರ ರಾಜ್ಯದ ಸಮ್ಮಿಶ್ರ ಸರ್ಕಾರ ಬಿದ್ದುಹೋದರೆ ಅದಕ್ಕೆ ಪಾಲುದಾರ ಪಕ್ಷಗಳಾದ ಜೆಡಿಎಸ್– ಕಾಂಗ್ರೆಸ್ಸೇ ಕಾರಣ. ಅದಕ್ಕೆ ನಾವು ಜವಾಬ್ದಾರರಲ್ಲ’ ಎಂದು ಹೇಳಿದರು.