ಬೆಳಗಾವಿ: ‘ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ವಿಫುಲ ಅವಕಾಶಗಳಿದ್ದು, ಇತ್ತ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರು ಕೈಗಾರಿಕಾ ಇಲಾಖೆ, ಕೆಐಎಡಿಬಿ ಹಾಗೂ ಕೆಎಸ್ಎಸ್ಐಡಿಸಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.
‘4 ಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1,905 ಕಲಂ 109ರಲ್ಲಿ ಭೂ ಪರಿವರ್ತನೆಗೆ ಅನುಮೋದನೆ ನೀಡಲಾಯಿತು. ಈ ಕೈಗಾರಿಕೆಗಳಿಂದ ₹ 20.41 ಕೋಟಿ ಹೂಡಿಕೆಯಾಗುತ್ತಿದ್ದು, 87 ಮಂದಿಗೆ ಉದ್ಯೋಗ ಕಲ್ಪಿಸಲು ಯೋಜಿಸಲಾಗಿದೆ. ಕೈಮಗ್ಗ ಮತ್ತು ಜವಳಿ ಇಲಾಖೆಯ ವಿಶೇಷ ಪ್ಯಾಕೇಜ್ ಯೋಜನೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ 39 ಜವಳಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಈ ಕೈಗಾರಿಕೆಗಳಿಂದ ₹ 166 ಕೋಟಿ ಹೂಡಿಕೆಯಾಗುತ್ತಿದ್ದು, 1,659 ಮಂದಿಗೆ ಉದ್ಯೋಗ ಕಲ್ಪಿಸಲು ಯೋಜಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಅಥಣಿಯಲ್ಲಿನ ಕೈಗಾರಿಕಾ ವಸಾಹತು 4 ‘ಸಿ’ ಹಾಗೂ ‘ಡಿ’ ಮಾದರಿಯ ಮಳಿಗೆಗಳು ಹಾಗೂ ಬೋರಗಾಂವದಲ್ಲಿನ ಕೈಗಾರಿಕಾ ವಸಾಹತಿನಲ್ಲಿ ‘ಸಿ’ ಮಾದರಿಯ 5 ಮಳಿಗೆಗಳನ್ನು ಪರಿಶಿಷ್ಟ ಜಾತಿಯ ಉದ್ದಿಮೆದಾರು, ಕಿತ್ತೂರು ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕೈಗಾರಿಕೆಗಳ ಸ್ಥಾಪನೆಗೆ 7 ಸಾಮಾನ್ಯ ವರ್ಗದ ಉದ್ದಿಮೆದಾರರಿಗೆ 4 ಅಂದರೆ 25 ಎಕರೆ ನಿವೇಶನ, 10 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ 6 ಎಕರೆ ನಿವೇಶನ ಹಂಚಿಕೆ ಮಾಡಲಾಯಿತು. ಈ ಕೈಗಾರಿಕೆಗಳಲ್ಲಿ ₹ 34.07 ಕೋಟಿ ಹೂಡಿಕೆಯಾಗುತ್ತಿದ್ದು, 492 ಜನರಿಗೆ ಉದ್ಯೋಗ ಅವಕಾಶ ದೊರೆಯಲಿದೆ’ ಎಂದು ತಿಳಿಸಿದರು.
‘ಕೈಗಾರಿಕಾ ಪ್ರದೇಶಗಳಲ್ಲಿನ ವಿದ್ಯುತ್ ಕಂಬಗಳನ್ನು ಹಾಗೂ ಟ್ರಾನ್ಸ್ಫಾರ್ಮರ್ಗಳನ್ನು ಕೂಡಲೇ ಪರಿಶೀಲಿಸಬೇಕು ಹಾಗೂ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
‘ಕೈಗಾರಿಕೆ ಪ್ರದೇಶಗಳಲ್ಲಿನ ಚರಂಡಿ, ರಸ್ತೆಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಲು ಕ್ರಮ ಜರುಗಿಸಬೇಕು. ಉದ್ಯಮಬಾಗ್ ಕೈಗಾರಿಕಾ ಪ್ರದೇಶದಲ್ಲಿ ಬೀದಿ ದೀಪಗಳನ್ನು ಅಳವಡಿಸಲು ₹ 55 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ಕಾಮಗಾರಿ ಕೈಗೊಳ್ಳಬೇಕು’ ಎಂದು ನಗರಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡ ಬಸವರಾಜ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.