ಬೆಳಗಾವಿ: ಮುಂದಿನ ಎಲ್ಲ ಚುನಾವಣೆಗಳಿಗೆ ಇವಿಎಂ ಬ್ಯಾನ್ ಮಾಡಿ ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡಿದರು.
ರಾಜ್ಯ ಘಟಕದ ಉಪಾಧ್ಯಕ್ಷ ರಾಜು ತಳವಾರ ಮಾತನಾಡಿ, ‘ಈ ಬಾರಿ ನಡೆದ ಲೋಕಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ಇವಿಎಂ ಯಂತ್ರಗಳಲ್ಲಿ ದೋಷ ಕಂಡು ಬಂದಿದೆ. ಅಲ್ಲದೇ ದೇಶದಾದ್ಯಂತ ಅನೇಕ ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳಿಗಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು ಕಂಡುಬಂದಿದೆ. ಇವಿಎಂಗಳನ್ನು ದುರುಪಯೋಗ ಪಡಿಸಿಕೊಂಡಿರುವ ಘಟನೆಗಳು ನಡೆದಿವೆ’ ಎಂದು ಆರೋಪಿಸಿದರು.
‘ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಮುಂದಿನ ಎಲ್ಲ ಚುನಾವಣೆಗಳಲ್ಲಿ ಇವಿಎಂ ಬಳಕೆಯನ್ನು ನಿಲ್ಲಿಸಬೇಕು. ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ನಡೆಸಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ರಾಹುಲ್ ವರಾಳೆ, ನಾಮದೇವ ಕಾಂಬಳೆ, ಸಂಗೀತಾ ಕಾಂಬಳೆ, ಸಿದ್ದು ಕಾಂಬಳೆ, ಅಕ್ಕಪ್ಪ ಕಾಂಬಳೆ ಭಾಗವಹಿಸಿದ್ದರು.