ಬೆಳಗಾವಿ: ‘ವಿಧಾನಮಂಡಲ ಅಧಿವೇಶನದಲ್ಲಿ ಒಮ್ಮೆಯೂ ಧ್ವನಿ ಎತ್ತದ ಸತೀಶ ಜಾರಕಿಹೊಳಿ, ಲೋಕಸಭೆಯಲ್ಲಿ ಮಾತನಾಡುತ್ತಾರಾ?’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಕೇಳಿದರು.
‘ಬಿಜೆಪಿ ಅಭ್ಯರ್ಥಿಯಾಗಿರುವ ಹೆಣ್ಮಗಳು ಏನು ಮಾಡುತ್ತಾಳೆ’ ಎಂಬ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಇಲ್ಲಿ ಭಾನುವಾರ ಪ್ರತಿಕ್ರಿಯಿಸಿ ಅವರು, ‘ಸಿದ್ದರಾಮಯ್ಯ ಮಾತಿನ ಭರದಲ್ಲಿ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ಕಾಂಗ್ರೆಸ್ ಮುಖವನ್ನು ತೋರಿಸಿದ್ದಾರೆ’ ಎಂದು ಟೀಕಿಸಿದರು.
‘ಕಾಂಗ್ರೆಸ್ ಚುಕ್ಕಾಣಿ ಹಿಡಿದ ಸೋನಿಯಾ ಗಾಂಧಿಗೆ ಯಾವ ಅನುಭವ ಇತ್ತು? ಜವಾಹರಲಾಲ್ ನೆಹರೂ ನಿಧನದ ಬಳಿಕ ಯಾವುದೇ ಅನುಭವ ಇಲ್ಲದ ಇಂಧಿರಾ ಗಾಂಧಿ ಪ್ರಧಾನಿ ಆಗಲಿಲ್ಲವೇ? ಮಹಿಳೆಯರ ಸಾಮರ್ಥ್ಯದ ಬಗ್ಗೆ ರಾಣಿ ಚನ್ನಮ್ಮನ ನೆಲದಲ್ಲಿ ಪ್ರಶ್ನಿಸಿದ್ದಾರೆ. ಮಹಿಳೆಯರ ಮೇಲಿನ ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಯಾವ ಅನುಭವ ಇದೆ? ಬೆಳಗಾವಿ ಅಭಿವೃದ್ಧಿ ಬಗ್ಗೆ ಅವರು ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆಯೇ? ಕಾಂಗ್ರೆಸ್ನವರು ಬೊಗಳೆ ಬೀಡುವ ಕೆಲಸ ಮಾಡುತ್ತಿದ್ದಾರೆ. ಈ ಭಾಗದ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಿಲ್ಲ’ ಎಂದು ಹರಿಹಾಯ್ದರು.
‘ಸಿದ್ದರಾಮಯ್ಯ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.