ಬೆಳಗಾವಿ: ‘ಜಿಲ್ಲೆಯಲ್ಲಿ ನೆರೆ ಮತ್ತು ಅತಿವೃಷ್ಟಿಯಿಂದ ಮನೆ, ಬೆಳೆ ಮೊದಲಾದವುಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಕೂಡಲೇ ಸಮರ್ಪಕ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
‘2019ರಲ್ಲಿ ಹಾನಿ ಅನುಭವಿಸಿದವರಲ್ಲಿ ಬಹುತೇಕರಿಗೆ ಇಂದಿಗೂ ಪರಿಹಾರ ಸಿಕ್ಕಿಲ್ಲ. ಅವರಿಗೂ ನ್ಯಾಯ ದೊರಕಿಸಿಕೊಡಬೇಕು. ತ್ವರಿತವಾಗಿ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ಆಸರೆಯಾಗಿ ನಿಲ್ಲಬೇಕು’ ಎಂದು ಒತ್ತಾಯಿಸಿದರು.
‘ಕಲ್ಯಾಣ ಕರ್ನಾಟಕಕ್ಕೆ ನೀಡಿದಂತೆ ವಿಶೇಷ ಸ್ಥಾನಮಾನವನ್ನು ಬೆಳಗಾವಿ ವಿಭಾಗದ ಜನರಿಗೂ ಕೊಡಬೇಕು. ಕೃಷ್ಣಾ ಕಣಿವೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.
‘ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದ್ದಾಗ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆದಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಲ್ಲಿ ಅಧಿವೇಶನ ಆಗಿಲ್ಲ. ಈ ಬಾರಿ ನಡೆಸಬೇಕು. ಈ ಭಾಗದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಭೀಮಪ್ಪ ಗಡಾದ, ನಾಸಿರ ಬಾಗವಾನ, ಎಂ.ವೈ. ಸೋಮಣ್ಣವರ, ಜಿ.ಎಸ್. ಗೋಕಾಕ ಇದ್ದರು.