ಬೆಳಗಾವಿ: ‘ಪರಿಶಿಷ್ಟರಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. ಆ ಮೂಲಕ ಅನ್ಯಾಯಕ್ಕೆ ಒಳಗಾಗಿರುವ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು’ ಎಂದು ಬಿಜೆಪಿ ಮುಖಂಡ ಗೋವಿಂದ ಕಾರಜೋಳ ಹೇಳಿದರು.
ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಈಚೆಗೆ ನಡೆದ ‘ಮಾದಿಗ ಮುನ್ನಡೆ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಬೇಕು. ಮಾಧುಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟ ಉಪಸಮಿತಿ ನೀಡಿದ ವರದಿ ಆಧರಿಸಿ ಒಳ ಮೀಸಲಾತಿ ಜಾರಿ ಮಾಡಬೇಕು’ ಎಂದೂ ಆಗ್ರಹಿಸಿದರು.
ಶಾಸಕರಾದ ದುರ್ಯೋಧನ ಐಹೊಳೆ, ಬಸವರಾಜ ಮತ್ತಿಮೂಡು, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಉಮೇಶ ಕಾರಜೋಳ, ಮುತ್ತಣ್ಣ ಬೆನ್ನೂರ, ಬಾಳಪ್ಪ ಬೂದಿಹಾಳ, ಚಂದ್ರಕಾಂತ ಕಾಂತಿಕಾರ, ಸುಧಾಕರ ಸೂರ್ಯವಂಶಿ ಸೇರಿದಂತೆ ಹಲವರು ಭಾಗವಹಿಸಿದ್ದರು.