ಬೆಳಗಾವಿ (ಸುವರ್ಣ ವಿಧಾನಸೌಧ): ವಿಧಾನಪರಿಷತ್ ಇರಬೇಕಾ ಅಥವಾ ರದ್ದುಪಡಿಸಬೇಕಾ ಎಂಬ ಬಗ್ಗೆ ಹಿಂದಿನಿಂದಲೂ ಚರ್ಚೆ ನಡೆದುಕೊಂಡು ಬಂದಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಂಗಳವಾರ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
ವಿಧಾನಪರಿಷತ್ ಚುನಾವಣಾ ಫಲಿತಾಂಶದ ಕುರಿತ ಹೇಳಿಕೆ ನೀಡುವ ಸಂದರ್ಭದಲ್ಲಿ ಅವರು, ‘ವಿಧಾನ ಪರಿಷತ್ ಇರಬೇಕಾ ಅಥವಾ ಇರಬೇಡವೇ ಎಂಬ ಬಗ್ಗೆ ಜಿಜ್ಞಾಸೆ ಕಾಡಲಾರಂಭಿಸಿದೆ. ಚಿಂತಕರ ಚಾವಡಿಯಲ್ಲಿ ಈ ಬಗ್ಗೆ ಚರ್ಚೆ ನಡೆಯಬೇಕು ಮತ್ತು ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಬೇಕು’ ಎಂದು ಅವರು ಹೇಳಿದರು.
ಈ ಹಿಂದೆ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಈಶ್ವರಪ್ಪ ಅವರನ್ನು ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಆಯ್ಕೆ ಮಾಡಿತ್ತು. ಒಮ್ಮೆ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೇಲ್ಮನೆಯ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು.