ಬೆಳಗಾವಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಶನಿವಾರ ಇಲ್ಲಿನ ಹೊಸ ನ್ಯಾಯಾಲಯ ಸಂಕೀರ್ಣದ ಎ.ಡಿ.ಆರ್. ಕಟ್ಟಡದಲ್ಲಿ ಬೃಹತ್ ಲೋಕ ಅದಾಲತ್ ನಡೆಯಿತು.
ಬೆಳಿಗ್ಗೆ 11ಕ್ಕೆ ಪ್ರಾರಂಭವಾದ ಅದಾಲತ್ನಲ್ಲಿ ನ್ಯಾಯಿಕ ಸಂಧಾನಕಾರರಾಗಿ ಭಾಗವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಸಿ.ಎಂ. ಜೋಶಿ ಮತ್ತು ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಭಾಗವಹಿಸಿ ಕಕ್ಷಿದಾರರ ಜೊತೆ ಸಮಾಲೋಚನೆ ನಡೆಸಿದರು. ಪರಸ್ಪರ ಒಪ್ಪಿಗೆ ಮೇರೆಗೆ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿದರು.
ಮಧ್ಯಾಹ್ನ 12ಕ್ಕೆ ಆರಂಭವಾದ ಅದಾಲತ್ನಲ್ಲಿ ನ್ಯಾಯಿಕ ಸಂಧಾನಕಾರರಾಗಿ ಮತ್ತು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ ಮತ್ತು ಸಂಧಾನಕಾರರಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭಾಗವಹಿಸಿದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ವಿಜಯ ದೇವರಾಜ್ ಅರಸ್, ಸಿಬ್ಬಂದಿ ಹಾಗೂ ವಕೀಲರು ಭಾಗವಹಿಸಿದ್ದರು.