ಬೆಳಗಾವಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಅವರು, ಭಾನುವಾರ ಚುನಾವಣೆ ಪ್ರಚಾರಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರೊಂದಿಗೆ ತಾಲ್ಲೂಕಿನ ಹಿಂಡಲಗಾದ ಗಣಪತಿ ಮಂದಿರಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಅಂಬೇಡ್ಕರ್, ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಸಂಭಾಜಿ ಮಹಾರಾಜರ, ಶಿವಾಜಿ ಮಹಾರಾಜ, ರಾಜಸಂಹಗಡದಲ್ಲಿನ ಶಿವಾಜಿ ಮಹಾರಾಜ ಪ್ರತಿಮೆ ಹಾಗೂ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಚುನಾವಣೆ ಪ್ರಚಾರಾರ್ಥ ವಿವಿಧ ಮಾರ್ಗಗಳಲ್ಲಿ ನಡೆದ ಬೈಕ್ ರ್ಯಾಲಿಯಲ್ಲಿ ಅಪಾರ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ರ್ಯಾಲಿಯುದ್ದಕ್ಕೂ ಕೇಸರಿ ಬಾವುಟಗಳು ರಾರಾಜಿಸಿದವು.
‘ನಾವು ಯಾವುದೇ ಕೆಲಸ ಮಾಡುವ ಮುನ್ನ, ಗಣೇಶನಿಗೆ ಪೂಜಿಸುತ್ತೇವೆ. ಇಂದು ಗಣೇಶನಿಗೆ ಪೂಜೆ ಸಲ್ಲಿಸಿ, ಪ್ರಚಾರ ಆರಂಭಿಸಿದ್ದೇವೆ. ನಮ್ಮ ದೃಷ್ಟಿಯಲ್ಲಿ ಪ್ರತಿ ಮತದಾರ ನಿರ್ಣಾಯಕ. ಈ ಚುನಾವಣೆಯಲ್ಲಿ ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ’ ಎಂದು ಮೃಣಾಲ್ ಹೇಳಿದರು.
ಚನ್ನರಾಜ ಹಟ್ಟಿಹೊಳಿ, ‘ದೇಶದಲ್ಲಿ ಯುವಶಕ್ತಿಗೆ ಶಕ್ತಿ ನೀಡುವುದಕ್ಕಾಗಿ ಪಕ್ಷವು ಯುವಕರಿಗೆ ಆದ್ಯತೆ ನೀಡಿದೆ. ಬೆಳಗಾವಿ, ಚಿಕ್ಕೋಡಿ ಮತ್ತು ಕೆನರಾ ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ದೊಡ್ಡ ಸಂಖ್ಯೆಯಲ್ಲಿ ಗೆಲುವು ಸಾಧಿಸುತ್ತದೆ’ ಎಂದರು.
‘ಬಿಜೆಪಿ ಮುಖಂಡರೇ ಆ ಪಕ್ಷದ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ. ಬಿಜೆಪಿಯಲ್ಲಿರುವ ಗೊಂದಲಗಳಿಂದ ನಮಗೆ ಅನುಕೂಲವಾಗುತ್ತದೆ’ ಎಂದರು.
ಮುಖಂಡರಾದ ಮಲ್ಲೇಶ ಚೌಗಲೆ, ಯುವರಾಜ ಕದಂ, ಸುರೇಶ ಇಟಗಿ, ಅಡಿವೇಶ ಇಟಗಿ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.