ಬೆಳಗಾವಿ: ‘ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಪ್ರತಿಯೊಂದು ಸಮುದಾಯದವರೂ ಶಿಕ್ಷಣಕ್ಕೆ ಒತ್ತು ನೀಡಬೇಕು. ಒಗ್ಗೂಡಿ ಪ್ರಗತಿ ಸಾಧಿಸಬೇಕು’ ಎಂದು ಶಾಸಕ ಅನಿಲ ಬೆನಕೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ನಗರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಹರ್ಷಿ ಸವಿತಾ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸವಿತಾ ಸಮಾಜ ಸದೃಢವಾಗಬೇಕು. ಅವರವರ ಕಸುಬಿನ ಮೇಲೆ ಗೌರವ, ನಿಷ್ಠೆ ಇಟ್ಟುಕೊಂಡಾಗ ಬದುಕಿನಲ್ಲಿ ಉತ್ತುಂಗಕ್ಕೇರಲು ಸಾಧ್ಯವಾಗಲಿದೆ. ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಈ ಸಮುದಾಯ ಮುಂದೆ ಬರುತ್ತಿಲ್ಲವಾದ್ದರಿಂದ ಹಲವು ಸೌಲಭ್ಯಗಳು ಪರರ ಪಾಲಾಗುತ್ತಿವೆ. ಮುಂದಿನ ದಿನಗಳಲ್ಲಿ ಸೌಲಭ್ಯಗಳನ್ನು ಪಡೆದುಕೊಂಡು ಮುಂದೆ ಬರಬೇಕು’ ಎಂದು ಸಲಹೆ ನೀಡಿದರು.
‘ಸಮಾಜದ ಸಮುದಾಯ ಭವನಕ್ಕೆ ಸರ್ಕಾರದಿಂದ ಜಮೀನು ಮಂಜೂರು ಮಾಡಿಸಿಕೊಡಲಾಗುವುದು. ಮುಂದಿನ ವರ್ಷ ದೊಡ್ಡ ಪ್ರಮಾಣದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕು’ ಎಂದರು.
ಉಪ ವಿಭಾಗಾಧಿಕಾರಿ ಅಶೋಕ ತೇಲಿ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಎಚ್. ಭಜಂತ್ರಿ ಸ್ವಾಗತಿಸಿದರು.