ಬೆಳಗಾವಿ: ‘ವೈಜ್ಞಾನಿಕ ರೀತಿಯಲ್ಲಿ ಕಾಯಿಗಳನ್ನು ಕಟಾವು ಮಾಡಿ, ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ಗ್ರಾಹಕರಿಗೆ ದೊರಕಿಸಲು ಈ ಮೇಳ ಆಯೋಜಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ನಗರದ ಹ್ಯೂಮ್ ಪಾರ್ಕ್ನಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ 4 ದಿನಗಳ ಕಾಲ ನಡೆಯಲಿರುವ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ಈ ಮೇಳದಲ್ಲಿ ಹಲವು ಬಗೆಯ ಮಾವಿನ ಹಣ್ಣುಗಳು ಮಾರಾಟಕ್ಕಿವೆ. ಜಿಲ್ಲೆಯ ಎಲ್ಲ ಗ್ರಾಹಕರು ರೈತರಿಂದಲೇ ನೇರವಾಗಿ ಖರೀದಿಸಿ, ರುಚಿಕರ ಮಾವು ಸವಿಯಬೇಕು. ರೈತರನ್ನು ಪ್ರೋತ್ಸಾಹಿಸಬೇಕು’ ಎಂದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ‘ಇಂತಹ ಮೇಳಗಳು ರೈತರಲ್ಲಿ ಆತ್ಮ ವಿಶ್ವಾಸ ತುಂಬುತ್ತವೆ. ಮಾವು ಪ್ರದರ್ಶನ ಮಾತ್ರವಲ್ಲದೆ, ಪ್ರತಿ ಎರಡು ತಿಂಗಳಿಗೊಮ್ಮೆ ವಿವಿಧ ತೋಟಗಾರಿಕಾ ಬೆಳೆಗಳ ಮೇಳ ಆಯೋಜಿಸಿ ರೈತರನ್ನು ಪ್ರೋತ್ಸಾಹಿಸಲಾಗುತ್ತದೆ’ ಎಂದು ತಿಳಿಸಿದರು.
ಮಳಿಗೆ ವೀಕ್ಷಿಸಿದ ಡಿಸಿ: ಪ್ರತಿ ಮಾವಿನ ಮಳಿಗೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ರೈತರನ್ನು ಹುರಿದುಂಬಿಸಿದರು. ಬೆಳಗಾವಿ, ಖಾನಾಪುರ, ಧಾರವಾಡ, ಚನ್ನಮ್ಮ ಕಿತ್ತೂರು ಹಾಗೂ ಮಹಾರಾಷ್ಟ್ರದಿಂದಲೂ ಬಂದಿರುವ ರೈತರು ತಾವು ಬೆಳೆದ ಮಾವಿನ ಹಣ್ಣಿನ ಬಗ್ಗೆ ಮಾಹಿತಿ ನೀಡಿದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ, ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಸೋಮಶೇಖರ ಹುಳ್ಳೊಳ್ಳಿ ಉಪಸ್ಥಿತರಿದ್ದರು.