ಬೆಳಗಾವಿ: ‘ಅಕಾಲಿಕ ಮಳೆಯಿಂದಾಗಿ ಹಾನಿಗೆ ಒಳಗಾದ ಬೆಳೆಗಳಿಗೆ ಎಕರೆಗೆ ₹ 50ಸಾವಿರದಂತೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಮುಖಂಡ ಮನೋಹರ ಕಿಣೇಕರ ಮಾತನಾಡಿ, ‘ಅಕಾಲಿಕ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಭತ್ತದ ಬೆಳೆಗೆ ಬಹಳಷ್ಟು ಹಾನಿಯಾಗಿದೆ. ಇದರಿಂದ ಕೈಗೆ ಬಂದ ಬೆಳೆ ಬಾಯಿಗೆ ಬಾರದಂತಾದ ಸ್ಥಿತಿಯಲ್ಲಿ ರೈತರಿದ್ದಾರೆ. ಅಪಾರ ನಷ್ಟ ಅನುಭವಿಸಿದ್ದಾರೆ. ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಸಮರ್ಪಕವಾಗಿ ಸಮೀಕ್ಷೆ ನಡೆಸಬೇಕು. ನಷ್ಟಕ್ಕೆ ಒಳಗಾದವರಿಗೆ ಪರಿಹಾರ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.