ಬೆಳಗಾವಿ: ‘ಮಲಪ್ರಭಾ, ಘಟಪ್ರಭಾ ನದಿ ತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು’ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಒತ್ತುವರಿ ಜಾಗದ ಸಮಸ್ಯೆಗಳ ಕುರಿತು ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ನದಿಗಳಲ್ಲಿ ನೀರು ಸರಾಗವಾಗಿ ಹರಿಯಲು ಅವಕಾಶ ನೀಡಬೇಕಿದೆ. ಸಮೀಕ್ಷೆ ಬಳಿಕ ಜನಪ್ರತಿನಿಧಿಗಳ ಸಭೆಯನ್ನೂ ನಡೆಸಲಾಗುವುದು. ನದಿ ತೀರಗಳ ಒತ್ತುವರಿ ತೆರವಿನ ಯೋಜನೆ ರೂಪಿಸಿ ಆರ್ಥಿಕ ನೆರವು ಪಡೆದುಕೊಳ್ಳಲಾಗುವುದು’ ಎಂದು ಹೇಳಿದರು.
ಒತ್ತುವರಿ ಕಾನೂನು ಬಾಹಿರ:ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಮಾತನಾಡಿ, ‘ಮೊದಲು ನದಿಗಳ ಒತ್ತುವರಿ ಬಗ್ಗೆ ಸಮೀಕ್ಷೆ ಮಾಡಿ ಗುರುತು ಹಾಕಿದ ಬಳಿಕ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸುವುದು ಸೂಕ್ತ. ತೀರದಲ್ಲಿ ನಿರಾಶ್ರಿತರಿದ್ದರೆ ಅವರಿಗೆ ಪುನರ್ವಸತಿ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಗಮನಹರಿಸಬೇಕು’ ಎಂದರು.
ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಮಾತನಾಡಿ, ‘ಮಳೆಗಾಲದಲ್ಲಿ ಪ್ರವಾಹ ಸಾಧ್ಯತೆ ಇರುವುದರಿಂದ ನದಿ ತೀರದ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಪ್ರಕರಣವೊಂದರಲ್ಲಿ ಹೈಕೋರ್ಟ್ ಆದೇಶ ನೀಡಿದೆ. ಕಾನೂನು ಪ್ರಕಾರ ನದಿ ಹಾಗೂ ದಂಡೆ ಸರ್ಕಾರದ ಆಸ್ತಿಯಾಗಿದೆ. ಯಾರಾದರೂ ಮನೆ ಕಟ್ಟಿದರೆ ಅಥವಾ ಕೃಷಿ ಮಾಡುವುದು ಅತಿಕ್ರಮಣ ಎಂದು ಭಾವಿಸಲಾಗುತ್ತದೆ. ಮನೆ ಕಟ್ಟಿಕೊಂಡವರು ಬಡವರಾಗಿದ್ದರೆ ಅವರನ್ನು ನಿರಾಶ್ರಿತರು ಎಂದು ಪರಿಗಣಿಸಿ ಪುನರ್ವಸತಿ ಕಲ್ಪಿಸಬಹುದು. ಇದರಿಂದ ಕಾನೂನು ತೊಡಕು ಎದುರಾಗುವುದನ್ನು ತಪ್ಪಿಸಬಹುದು’ ಎಂದು ಮಾಹಿತಿ ನೀಡಿದರು.
ಹೂಳೆತ್ತುವುದಕ್ಕೂ ಆದ್ಯತೆ:‘ಡ್ರೋನ್ ಬಳಸಿಕೊಂಡು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕಿದೆ. ಒತ್ತುವರಿ ತೆರವು ಜೊತೆಗೆ ನದಿಯ ಹೂಳೆತ್ತುವ ಕೆಲಸಕ್ಕೂ ಆದ್ಯತೆ ನೀಡಬೇಕಿದೆ’ ಎಂದು ತಿಳಿಸಿದರು.
ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಎಚ್.ವಿ. ಇದ್ದರು.
ಬಳಿಕ ಕಂದಾಯ, ಜಲಸಂಪನ್ಮೂಲ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ನದಿ ಪಾತ್ರಗಳಲ್ಲಿ ಆಗಿರುವ ಒತ್ತುವರಿಯ ವೈಜ್ಞಾನಿಕ ಸಮೀಕ್ಷೆ ಹಾಗೂ ತೆರವಿಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.