ಬೆಳಗಾವಿ: ಕನ್ನಡಿಗರು ಮತ್ತು ಮರಾಠಿ ಭಾಷಿಕರ ಸೌಹಾರ್ದ ಸಂಬಂಧಕ್ಕೆ ಹುಳಿ ಹಿಂಡುವ ಉದ್ದೇಶದಿಂದ ಕಿಡಿಗೇಡಿಗಳು ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗಳಿಗೆ ಅಗೌರವ ತೋರಿಸಿರುವುದು ಖಂಡನೀಯ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ರಾಜ್ಯದಲ್ಲಿರುವ ಎಲ್ಲ ಭಾಷೆಗಳ ಜನರೂ ಸೌಹಾರ್ದದಿಂದ ಇದ್ದಾರೆ. ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಗಡಿ ಭಾಗವಾದ ಬೆಳಗಾವಿ ಜಿಲ್ಲೆ ಇದಕ್ಕೆ ಹೊರತೇನೂ ಆಗಿಲ್ಲ. ನಾವು ರಾಯಣ್ಣನನ್ನು ಗೌರವಿಸುವಂತೆಯೇ ಶಿವಾಜಿಯನ್ನೂ ಗೌರವಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಪಟ್ಟಭದ್ರ ಹಿತಾಸಕ್ತಿಗಳು ಬೀದಿಗೆ ಇಳಿದಿದ್ದು, ಸರ್ಕಾರ ಇದನ್ನು ಸಹಿಸುವುದಿಲ್ಲ. ಇಂತಹ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಜನತೆ ವಿಚಲಿತರಾಗದೆ ಎಂದಿನಂತೆ ಶಾಂತಿ ಮತ್ತು ಸೌಹಾರ್ದ ಕಾಪಾಡಿಕೊಳ್ಳಬೇಕು ಎಂದು ಕೋರಿದ್ದಾರೆ.