ಬೆಳಗಾವಿ: ‘ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸಮಯ ಮೀಸಲಿಡಬೇಕು. ಉತ್ತಮ ನಾಗರಿಕರಾಗಿ ಬದುಕಲು ಭದ್ರ ಬುನಾದಿ ಹಾಕಿಕೊಳ್ಳಬೇಕು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಲಹೆ ನೀಡಿದರು.
ಗ್ರಾಮೀಣ ಕ್ಷೇತ್ರದ ಖನಗಾಂವ ಕೆ.ಎಚ್. ಗ್ರಾಮದಲ್ಲಿ ಮಹಾತ್ಮ ಜ್ಯೋತಿಬಾ ಫುಲೆ ಪ್ರತಿಷ್ಠಾನದಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಿ ಅವರು ಮಾತನಾಡಿದರು.
‘ವಿದ್ಯಾರ್ಥಿ ಜೀವನ ಅತ್ಯಂತ ಪ್ರಮುಖ ಘಟ್ಟವಾಗಿದೆ. ಹೀಗಾಗಿ, ಸಮಯವನ್ನು ಅನಗತ್ಯವಾಗಿ ವ್ಯರ್ಥ ಮಾಡಬಾರದು’ ಎಂದರು.
‘ಸಾಮಾಜಿಕ, ರಾಜಕೀಯ ಮೊದಲಾದ ವ್ಯವಸ್ಥೆಯಲ್ಲಿ ಯುವ ಜನರು ಪ್ರಮುಖ ಪಾತ್ರ ವಹಿಸಬೇಕು. ಆಗ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ’ ಎಂದು ಹೇಳಿದರು.
ಪ್ರತಿಷ್ಠಾನದ ಅಧ್ಯಕ್ಷ ಜ್ಯೋತಿಬಾ ಪಾಟೀಲ, ಮುಖಂಡರಾದ ಮಲ್ಲಪ್ಪ ಗಿರಿಯಾಳಕರ, ಬಾಳು ಗಿರಿಯಾಳಕರ ಇದ್ದರು.