ಬೆಳಗಾವಿ: ‘ಮೂಡಲಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (ಪಿಕೆಪಿಎಸ್) ಚುನಾವಣೆಗೆ ಅಡ್ಡಿಪಡಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಿಯಮಾನುಸಾರ ಚುನಾವಣೆಗೆ ಅವಕಾಶ ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿ ಆ ಸಂಘದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
‘ಕೆಲವರು ರಾಜಕೀಯ ದುರುದ್ದೇಶದಿಂದ ಚುನಾವಣೆಗೆ ಅಡ್ಡಿ ಮಾಡುತ್ತಿದ್ದಾರೆ. ಸಹಕಾರಿ ಸಂಘದ ಕಚೇರಿ ಎದುರು ಪ್ರತಿಭಟನೆ ನಡೆಸುವುದು, ಚುನಾವಣೆ ನಡೆಸದಂತೆ ಮೇಲಾಧಿಕಾರಿಗೆ ಮನವಿ ಸಲ್ಲಿಸುವುದು, ಚುನಾವಣಾ ಸಿಬ್ಬಂದಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ತೆಗೆಯಲಾಗಿದೆ ಎಂದು ಕೆಲವರು ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ದೂರಿದರು.
‘ಸಹಕಾರಿ ಸಂಘದ ಚುನಾವಣೆಯನ್ನು ನಿಯಮಾನುಸಾರ ಮಾಡಲು ಚುನಾವಣಾಧಿಕಾರಿ ಮುಂದಾಗಿದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ರಾಜಕೀಯ ಒತ್ತಡಕ್ಕೆ ಮಣಿಯದೆ ಚುನಾವಣಾ ಪ್ರಕ್ರಿಯೆ ನಡೆಸಬೇಕು’ ಎಂದು ಒತ್ತಾಯಿಸಿದರು.