ಬೆಳಗಾವಿ: ‘ಶಿಕ್ಷಕರು ಕೋವಿಡ್-19 ಸಂಕಷ್ಟದ ಕಾಲದಲ್ಲೂ ಮುಂದೆ ಬಂದು ಕೆಲಸ ಮಾಡುತ್ತಿರುವುದು ಮಾದರಿಯಾಗಿದೆ’ ಎಂದು ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಹೇಳಿದರು.
ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ವತಿಯಿಂದ ಶನಿವಾರ ಇಲ್ಲಿನ ಸಂತ ಅಂಥೋನಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಶಿಕ್ಷಕರು ಪಾಠ ಮಾಡುವುದಕ್ಕಷ್ಟೇ ಸೀಮಿತವಾಗದೆ ಇತರ ಕೆಲಸಗಳಲ್ಲೂ ತೊಡಗಿರುವುದು ಶ್ಲಾಘನೀಯವಾಗಿದೆ’ ಎಂದರು.
‘ಕೊರೊನಾ ಸೋಂಕಿನ ಭೀತಿಯಿಂದಾಗಿ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಮಾಡಲಾಗುತ್ತಿಲ್ಲ. ಡಾ.ಸರ್ವಪಲ್ಲಿ ರಾಧಾಕೃಷ್ಣ್ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ತಿಳಿಸಿದರು.
‘ಕೋವಿಡ್-19 ಕಾರಣದಿಂದ ನಾಲ್ಕು ತಿಂಗಳುಗಳಿಂದ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವೆ ಸಂಪರ್ಕ ಸರಿಯಾಗಿ ಸಾಧ್ಯವಾಗುತ್ತಿಲ್ಲ. ಆದರೂ ಶಿಕ್ಷಕರು ಅಲ್ಲಲ್ಲಿ ನವ ಮಾಧ್ಯಮ ಬಳಸಿಕೊಂಡು ಮಕ್ಕಳಿಗೆ ಕಲಿಸುತ್ತಿರುವುದು ಅಭಿನಂದನಾರ್ಹ’ ಎಂದು ಹೇಳಿದರು.
‘ಕೋರೊನಾ ಹೋಗಲಾಡಿಸಲು ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಬೇಕು. ಸೋಂಕು ತಗುಲಿದರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ‘ಶಿಕ್ಷಕರಿಂದಾಗಿ ದೇಶವು ಎಲ್ಲಾ ರಂಗದಲ್ಲೂ ಮುಂದೆ ಸಾಗುತ್ತಿದೆ. ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಪ್ರಾಮಾಣಿಕತೆಯಿಂದ ಶಿಕ್ಷಣವನ್ನು ನೀಡಿ ಅವರಿಗೆ ಎಲ್ಲಾ ರೀತಿಯ ಸುಜ್ಞಾನವನ್ನೂ ತುಂಬುತ್ತಾರೆ. ಅವರಿಂದಾಗಿಯೇ ರಾಷ್ಟ್ರ ಅಭಿವೃದ್ಧಿ ಹೊಂದುತ್ತಿದೆ’ ಎಂದರು.
ನಿವೃತ್ತ ಶಿಕ್ಷಕರು ಹಾಗೂ ವಿಶೇಷ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ ಎಚ್.ವಿ. ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.