ಬೆಳಗಾವಿ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲಕ್ಷ್ಮಣ ನಿಂಬರಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಹಿಂದಿನ ಎಸ್ಪಿ ಸುಧೀರಕುಮಾರ ರೆಡ್ಡಿ ಅಧಿಕಾರ ಹಸ್ತಾಂತರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಇಲಾಖೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ತರಿಸಿಕೊಂಡು ಅಧ್ಯಯನ ಮಾಡುತ್ತೇನೆ. ನನ್ನ ಅವಧಿಯಲ್ಲಿ ಕ್ರೈಂ ರೇಟ್ ಇಳಿಸಲು ಪ್ರಯತ್ನ ಮಾಡುತ್ತೇನೆ. ಎಲ್ಲ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುತ್ತೇನೆ’ ಎಂದು ತಿಳಿಸಿದರು.
ಪರಿಚಯ: ಹಿಂದೆಬಳ್ಳಾರಿಯ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮಣ ನಿಂಬರಗಿ ಅವರು2014ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದವರಾಗಿದ್ದು, ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಎಂಜಿನಿಯರಿಂಗ್ (ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್) ಪದವಿ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರೊಬೆಷನರಿ ಎಸ್ಪಿ, ಚಿತ್ರದುರ್ಗದ ಹೆಚ್ಚುವರಿ ಎಸ್ಪಿ, ಉಡುಪಿ ಎಸ್ಪಿ, ಬೆಂಗಳೂರಿನಲ್ಲಿ ಎಸ್ಪಿ ವೈರಲೆಸ್ ಆಗಿ ಕಾರ್ಯನಿರ್ವಹಿಸಿದ್ದಾರೆ.
ರೆಡ್ಡಿಗೆ ಬೀಳ್ಕೊಡುಗೆ: ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿ, ವರ್ಗಾವಣೆಯಾದ ಸುಧೀರಕುಮಾರ ಅವರಿಗೆ ಕಚೇರಿಯ ಸಿಬ್ಬಂದಿ ಆತ್ಮೀಯ ಬೀಳ್ಕೊಡುಗೆ ನೀಡಿದರು.