ಅಥಣಿ: ತಾಲ್ಲೂಕಿನ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಕುಂದು ಕೊರತೆಗಳ ನಿವಾರಣೆಗೆ ಸಭೆ ನಡೆಸದೆ ತಹಶೀಲ್ದಾರ್ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮುಖಂಡ ಸಿದ್ದಾರ್ಥ ಸಿಂಗೆ ಮೊದಲಾದವರು ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಮಿನಿವಿಧಾನಸೌಧದಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಮುಖಂಡರು, ‘ತಹಶೀಲ್ದಾರ್ ಹಾಗೂ ಸಮಾಜ ಕಲ್ಯಾಣಾಧಿ ಅಧಿಕಾರಿ ಕುಂಟು ನೆಪಗಳನ್ನು ಹೇಳುತ್ತಿದ್ದಾರೆ’ ಎಂದು ದೂರಿದರು.
ಈ ವೇಳೆ ಮಧ್ಯಪ್ರವೇಶಿಸಿದ ತಾಲ್ಲೂಕು ಪಂಚಾಯಿತಿ ಇಒ ರವಿ ಬಂಗಾರೆಪ್ಪನವರ, ತಮ್ಮನ್ನು ಬೆದರಿಸಲು ಪ್ರಯತ್ನಿಸಿದ್ದಕ್ಕೆ ಮುಖಂಡು ತೀವ್ರ ಪ್ರತಿರೋಧ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು. ಶೀಘ್ರವೇ ಸಭೆ ಕರೆಯುವುದಾಗಿ ಭರವಸೆ ನೀಡಿದ ತಹಶೀಲ್ದಾರ್ ದುಂಡಪ್ಪ ಕೋಮಾರ ಮುಖಂಡರನ್ನು ಸಮಾಧಾನಪಡಿಸಿದರು.
‘ಪರಿಶಿಷ್ಟರ ಕುಂದುಕೊರತೆ ಸಭೆ ನಡೆಸಲು ಕೊರೊನಾ ಕಾರಣ ಹೇಳುತ್ತೀರಿ. ನೂರಾರು ಜನರನ್ನು ಸೇರಿಸಿ ಇತರ ಸಭೆ ನಡೆಸುತ್ತೀರಿ. ಆಗ, ಕೊರೊನಾ ಆಗುವುದಿಲ್ಲವೇ?’ ಎಂದು ಮುಖಂಡರು ಕೇಳಿದರು.