ಬೆಳಗಾವಿ: ‘ಆನ್ಲೈನ್ನಲ್ಲಿ ಔಷಧ ಮಾರಾಟ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದಲ್ಲಿ ಶನಿವಾರ ಉಪಔಷಧ ನಿಯಂತ್ರಕರ ಕಚೇರಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರಂಭಿಸಿರುವ ಜೆನರಿಕ್ ಔಷಧ ಮಳಿಗೆಗಳಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಹಾಯವಾಗಿದೆ’ ಎಂದರು.
ಮಂಗನ ಕಾಯಿಲೆ ನಿರೋಧಕ ಲಸಿಕೆ ತಯಾರಿಸಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ₹ 10 ಕೋಟಿ ವೆಚ್ಚದಲ್ಲಿ ಘಟಕ ನಿರ್ಮಿಸಲಾಗುವುದು. ಲಸಿಕೆ ನೀಡಿದ 60 ದಿನಗಳ ನಂತರ ರೋಗ ನಿರೋಧಕ ಶಕ್ತಿ ನಿರ್ಮಾಣವಾಗುತ್ತದೆ. ಮಂಗನ ಕಾಯಿಲೆ ನಿಯಂತ್ರಿಸುವಲ್ಲಿ ಇದು ಮಹತ್ತರ ಪಾತ್ರ ನಿರ್ವಹಿಸಲಿದೆ ಎಂದು ತಿಳಿಸಿದರು.
ಕಳೆದ ವರ್ಷ ಲಸಿಕೆ ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆಯೇ ಎನ್ನುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮಂಗನ ಕಾಯಿಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾದ ಇಬ್ಬರು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಹೇಳಿದರು.
ಅರಣ್ಯ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ‘ಆನ್ಲೈನ್ನಲ್ಲಿ ಔಷಧ ಮಾರಾಟ ಮಾಡದಂತೆ ಹಲವು ಜನರು ಮನವಿ ಮಾಡಿಕೊಂಡಿದ್ದಾರೆ’ ಎಂದು ಹೇಳಿದರು.
ವಿಧಾನ ಪರಿಷತ್ನ ವಿರೋಧ ಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರದಿಂದ ಆನ್ಲೈನ್ ಮೂಲಕ ಔಷಧ ಮಾರಾಟ ತಡೆಯಲು ಸೂಕ್ತ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು.
ಶಾಸಕ ಅಭಯ ಪಾಟೀಲ ಮಾತನಾಡಿ, ‘ಬೆಳಗಾವಿಯಲ್ಲಿ ದೊಡ್ಡ ದೊಡ್ಡ ಕಂಪನಿಗಳು ಔಷಧ ಮಾರಾಟ ಮಾಡುತ್ತಿರುವುದರಿಂದ ಸಣ್ಣ ವ್ಯಾಪಾರಸ್ಥರಿಗೆ ನಷ್ಟ ಉಂಟಾಗುತ್ತಿದೆ. ಅನುಮತಿ ನೀಡುವ ಸಂದರ್ಭದಲ್ಲಿ ಸ್ಥಳೀಯ ವ್ಯಾಪಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಹೇಳಿದರು.