ಬೆಳಗಾವಿ: ‘ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ, ಸದ್ಯದ ಮಾಹಿತಿ ಪ್ರಕಾರ ಬೆಳಗಾವಿ, ಖಾನಾಪುರ ಹಾಗೂ ಚನ್ನಮ್ಮನ ಕಿತ್ತೂರು ತಾಲ್ಲೂಕುಗಳಲ್ಲಿ ಅಂದಾಜು 2,150 ಹೆಕ್ಟೇರ್ ಭತ್ತದ ಬೆಳೆಗೆ ಹಾನಿಯಾಗಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದರು.
‘ಯಳ್ಳೂರ ಭಾಗದಲ್ಲಿ ಬೆಳೆ ಹಾನಿಯಾಗಿರುವುದನ್ನು ಖುದ್ದು ವೀಕ್ಷಿಸಿದ್ದೇನೆ. ತಾಲ್ಲೂಕು ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಜಂಟಿ ಸಮೀಕ್ಷೆ ಪ್ರಗತಿಯಲ್ಲಿದೆ. ನಿಖರ ವರದಿಯನ್ನು ಕ್ರೋಡೀಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ರೈತರಿಗೆ ಪರಿಹಾರ ಕೊಡಿಸಲು ಕ್ರಮ ವಹಿಸಲಾಗುವುದು. ಮಳೆಯಿಂದ ಹಿಂಗಾರು ಹಂಗಾಮಿನ ಇತರ ಬೆಳೆಗಳಿಗೆ ಅನುಕೂಲವಾಗಿದೆ’ ಎಂದು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.
‘ಜಿಲ್ಲೆಯಲ್ಲಿ 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಇದರಲ್ಲಿ ಕೆಲವು ಕಡೆಗಳಲ್ಲಿ ಕೊಯ್ಲು ಮುಗಿದಿದೆ’ ಎಂದರು.
ಚಿಕ್ಕೋಡಿ ತಾಲ್ಲೂಕಿನಲ್ಲಿ ಅಲ್ಲಲ್ಲಿ ಮಳೆ–ಗಾಳಿಯಿಂದ ಹಾಗಲಕಾಯಿ, ಕಬ್ಬು ಮೊದಲಾದ ಬೆಳೆಗಳು ನೆಲ ಕಚ್ಚಿವೆ.
‘ಈಚೆಗೆ ಸುರಿದ ಮಳೆಯಿಂದಾಗಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಅಕ್ಟೋಬರ್ನಲ್ಲಿ ಸವದತ್ತಿ ತಾಲ್ಲೂಕಿನಲ್ಲಿ 106 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿತ್ತು’ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರಗೋಡ ತಿಳಿಸಿದರು.