ಹಂದಿಗುಂದ: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಕೆಪಿಎಸ್) ರೈತರ ಪಾಲಿನ ಸಂಜೀವಿನಿಯಾಗಿ ಕಾರ್ಯನಿರ್ವಹಿಸುತ್ತಿವೆ. ಸಂಕಷ್ಟದಲ್ಲಿರುವ ಕೃಷಿಕರು ಅವುಗಳಿಂದ ಸಹಾಯ ಪಡೆದು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು’ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಹೇಬ ಕುಲಗುಡೆ ಹೇಳಿದರು.
ರಾಯಬಾಗ ತಾಲ್ಲೂಕು ಹಂದಿಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಈಚೆಗೆ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಸಂಘದ ನಿರ್ದೇಶಕ ಮಲ್ಲಿಕಾರ್ಜುನ ಖಾನಗೌಡ, ‘ಸೊಸೈಟಿಗೆ ಸೇಫ್ ಲಾಕರ್ ವ್ಯವಸ್ಥೆ ಕಲ್ಪಿಸಬೇಕು. ರೈತರು ಪಡೆದಿರುವ ಹಸು, ಎಮ್ಮೆ, ಟ್ರ್ಯಾಕ್ಟರ್ ಮೇಲಿನ ಸಾಲ ಮನ್ನಾ ಮಾಡಲು ಸರ್ಕಾರದ ಆದೇಶದಂತೆ ಕ್ರಮ ಕೈಗೊಳ್ಳಬೇಕು’ ಎಂದು ಕೋರಿದರು.
ಮುಖಂಡ ರಾಮನಗೌಡ ಪಾಟೀಲ, ‘ಪಡಿತರ ಧಾನ್ಯ ಸಂಗ್ರಹಿಸಲು ಗೋದಾಮು, ಸಂಘದ ಕಟ್ಟಡ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡಬೇಕು’ ಎಂದು ಒತ್ತಾಯಿಸಿದರು.