ಚಿಕ್ಕೋಡಿ: ‘ಒಂಬತ್ತು ವರ್ಷಗಳ ಅಧಿಕಾರಾವಧಿಯಲ್ಲಿ ಪ್ರಧಾನಮಂತ್ರಿ ಮೋದಿ ಅವರು ದೇಶಕ್ಕಷ್ಟೇ ಅಲ್ಲದೆ, ವಿಶ್ವಕ್ಕೆ ಹಲವು ಕೊಡುಗೆ ನೀಡಿದ್ದಾರೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆ, ಕೋವಿಡ್ ಲಸಿಕೆ ನೀಡಿದ್ದರಿಂದ ಭಾರತದ ಸ್ಥಾನಮಾನ ಉನ್ನತ ಮಟ್ಟಕ್ಕೇರಿದೆ’ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಚಿಕ್ಕೋಡಿ ಹಾಗೂ ಸದಲಗಾ ಪಟ್ಟಣಗಳಲ್ಲಿ ಗುರುವಾರ ಆಯೋಜಿಸಿದ್ದ ಪ್ರಧಾನಿ ಮೋದಿ ಅವರ ಒಂಬತ್ತು ವರ್ಷಗಳ ಸಾಧನೆ ತಿಳಿಸುವ ಮಹಾ ಜನಸಂಪರ್ಕ ಅಭಿಯಾನದಲ್ಲಿ ಅವರು ಮಾತನಾಡಿದರು.
‘ದೇಶದ 80 ಕೋಟಿ ಜನರಿಗೆ ಗರೀಬ್ ಕಲ್ಯಾಣ ಯೋಜನೆ ಮೂಲಕ ಆಹಾರಧಾನ್ಯ ವಿತರಣೆ ಮಾಡಲಾಗುತ್ತಿದೆ. ಜಲಜೀವನ್ ಮಿಷನ್ನಲ್ಲಿ ಮನೆ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸುವ ಯೋಜನೆ, 9.60 ಕೋಟಿ ಕುಟುಂಬಗಳಿಗೆ ಉಜ್ವಲ ಯೋಜನೆಯಡಿ ಉಚಿತವಾಗಿ ಅನಿಲ ಸಂಪರ್ಕ ಕಲ್ಪಿಸಿದ್ದು ಸೇರಿದಂತೆ ಹಲವು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಈ ಬಗ್ಗೆ ಜನರಿಗೆ ಮಾಹಿತಿ ತಲುಪಿಸುವ ಹೊಣೆಗಾರಿಕೆ ಬಿಜೆಪಿ ಕಾರ್ಯಕರ್ತರದ್ದಾಗಿದೆ’ ಎಂದು ಹೇಳಿದರು.
ಬಿಜೆಪಿ ಮುಖಂಡ ಜಗದೀಶ ಕವಟಗಿಮಠ ಮಾತನಾಡಿ, ‘ದೇಶದ ಸಮಗ್ರ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ಅನಿವಾರ್ಯವಾಗಿದ್ದಾರೆ. ಚುನಾವಣೆ ಪೂರ್ವ ಗೆಲ್ಲುವ ಗ್ಯಾರಂಟಿ ಇರದ ಕಾಂಗ್ರೆಸ್ ಐದು ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಈಗ ಅವುಗಳನ್ನು ಈಡೇರಿಸಲು ಹೆಣಗಾಡುತ್ತಿದೆ. ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಬಿಜೆಪಿ ಪರಾಭವಗೊಂಡಿದ್ದರೂ, ಕಾರ್ಯಕರ್ತರು ಎದೆಗುಂದಬಾರದು. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಬೇಕು’ ಎಂದು ಕರೆ ನೀಡಿದರು.
ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲೆ, ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ, ಬಿಜೆಪಿ ಮುಖಂಡ ಪ್ರಕಾಶ ಪಾಟೀಲ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಶಾಂಭವಿ ಅಶ್ವಥಪೂರ, ಸಂಜಯ ಪಾಟೀಲ, ಅಪ್ಪಾಸಾಹೇಬ ಚೌಗಲಾ ಇದ್ದರು.