ಬೆಳಗಾವಿ: ಸಮೀಪದ ಹಿಂಡಲಗಾ ಕೇಂದ್ರ ಕಾರಾಗೃಹದ ಬಳಿ ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂರಕರ್ ಮೇಲೆ ಗುಂಡಿನ ದಾಳಿ ನಡೆದ ಹಿನ್ನೆಲೆಯಲ್ಲಿ, ಪೊಲೀಸರು ನಗರದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ.
ಗಾಯಗೊಂಡ ಇಬ್ಬರನ್ನೂ ಇಲ್ಲಿನ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶ್ರೀರಾಮ ಸೇನೆ ಸಂಘಟನೆಯ ಹಲವು ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯ ಸುತ್ತ ಒಂದು ಕೆಎಸ್ಆರ್ಪಿ ತುಕಡಿ ಹಾಗೂ 50 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ನಗರ ಪೊಲೀಸ್ ಕಮಿಷನರ್ ಡಾ.ಎಂ.ಬಿ. ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾದಿ ಎಸಿಪಿ ಸದಾಶಿವ ಕಟ್ಟಿಮನಿ ಹಾಗೂ ಪಿಎಸ್ಐಗಳು ಗುಂಡಿನ ದಾಳಿ ನಡೆದ ಸ್ಥಳ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಸುತ್ತಲಿನ ಪ್ರದೇಶದಲ್ಲಿ ಇರುವ ಸಿಸಿಟಿವಿ ಕ್ಯಾಮೆರಾಗಳ ತಪಾಸಣೆಯಲ್ಲೂ ತೊಡಗಿದರು.