ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಗಳಖೋಡ: ಕಾಮಗಾರಿ ಪರಿಶೀಲಿಸಿದ ಅಧಿಕಾರಿ

Last Updated 28 ಜೂನ್ 2021, 12:55 IST
ಅಕ್ಷರ ಗಾತ್ರ

ಮುಗಳಖೋಡ (ಬೆಳಗಾವಿ ಜಿಲ್ಲೆ): ಪಟ್ಟಣದಲ್ಲಿ ಪುರಸಭೆಯಿಂದ ಕೈಗೊಂಡಿರುವ ಕಾಮಗಾರಿಗಳು ಕಳಪೆ ಮತ್ತು ಅವೈಜ್ಞಾನಿಕವಾಗಿವೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿರುವುದರಿಂದಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ ಪಿ.ಜೆ. ಸಿಂಧೂರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

‘ಪ್ರಜಾವಾಣಿ’ಯಲ್ಲಿ ಸೋಮವಾರ ‘ಇದ್ದೂ ಇಲ್ಲದಂತಾದ ಶೌಚಾಲಯಗಳು’ ಶೀರ್ಷಿಕೆಯಲ್ಲಿ ಪ್ರಕಟವಾಗಿದ್ದ ವರದಿ ಆಧರಿಸಿ ಬಂದಿದ್ದ ಅವರು ಸ್ಥಳೀಯರಿಂದ ಮಾಹಿತಿ ಪಡೆದರು.

‘ಜಿಲ್ಲಾಧಿಕಾರಿಯೇ ಸ್ಥಳಕ್ಕೆ ಬಂದು ಖುದ್ದು ಪರಿಶೀಲನೆ ನಡೆಸಬೇಕು’ ಎಂದು ನಾಗರಿಕರು ಪಟ್ಟು ಹಿಡಿದರು. ಪುರಸಭೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತರಾಟೆಗೆ ತೆಗೆದುಕೊಂಡರು.

‘14 ಮತ್ತು 15ನೇ ಹಣಕಾಸು, ಎಸ್‌ಎಫ್‌ಸಿ ಮತ್ತು ನಗರೋತ್ಥಾನ ಯೋಜನೆಯ ಕಾಮಗಾರಿಗಳು ಕಳಪೆಯಾಗಿವೆ. ಇದಕ್ಕೆ ಕಾರಣವಾದವರ ವಿರುದ್ಧ ಕ್ರಮ ವಹಿಸಬೇಕು. ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಅಲ್ಲಿಯವರಗೆ ಇಲ್ಲಿ ಯಾವುದೇ ಕಾಮಗಾರಿಗಳನ್ನು ನಡೆಸಲು ಬಿರುವುದಿಲ್ಲ’ ಎಂದು ರೈತ ಮುಖಂಡ ಸುರೇಶ ಹೊಸಪೇಟಿ ಎಚ್ಚರಿಕೆ ನೀಡಿದರು.

‘ಕಾಮಗಾರಿಗಳಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಜುಲೈ 5ರಿಂದ ಪುರಸಭೆ ಎದುರು ಧರಣಿ ನಡೆಸುತ್ತೇವೆ’ ಎಂದು ಮುಖಂಡ ಭೀಮರಾಯ ಖೇತಗೌಡರ ತಿಳಿಸಿದರು.

‘ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರುತ್ತೇನೆ. ವರದಿ ಸಲ್ಲಿಸುತ್ತೇನೆ’ ಎಂದು ಅಧಿಕಾರಿ ತಿಳಿಸಿದರು.

ಪುರಸಭೆ ಜೆಇ ಎಸ್.ಆರ್. ಚೌಗಲಾ, ಕೆಂಚಪ್ಪ ಹಳಿಂಗಳಿ, ಸಂಜಯ ಯಡವಣ್ಣವರ, ಪರಶುರಾಮ ಮುಗಳಿ, ಶ್ರೀಪಾಲ ಕುರಬಳ್ಳಿ, ಹಣಮಂತ ಬಾಬಣ್ಣವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT