ಬೆಳಗಾವಿ: ಈ ಬಾರಿಯ ಗಣರಾಜ್ಯೋತ್ಸವ ಪರೇಡ್ನಲ್ಲಿ ಪ್ರದರ್ಶನಗೊಳ್ಳಬೇಕಿದ್ದ ಮಹಾತ್ಮರ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿರುವ ಗಣರಾಜ್ಯೋತ್ಸವ ಆಯ್ಕೆ ಸಮಿತಿ ಮತ್ತು ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮಾನವ ಬಂಧುತ್ವ ವೇದಿಕೆ ವಿಭಾಗ ಸಂಚಾಲಕ ತೋಳಿ ಭರಮಣ್ಣ, ‘ಕೇರಳ ರಾಜ್ಯದಿಂದ ಬ್ರಹ್ಮಶ್ರೀ ನಾರಾಯಣಗುರು, ಪಶ್ಚಿಮ ಬಂಗಾಳದಿಂದ ನೇತಾಜಿ ಸುಭಾಷ್ ಚಂದ್ರ ಭೋಸ್, ತಮಿಳುನಾಡು ಸರ್ಕಾರದಿಂದ ಸ್ವಾತಂತ್ರ್ಯ ಹೋರಾಟ ಬಿಂಬಿಸುವ ಸ್ತಬ್ಧಚಿತ್ರಗಳನ್ನು ಕಳುಹಿಸಿಕೊಡಲಾಗಿತ್ತು. ಆದರೆ, ಗಣರಾಜ್ಯೋತ್ಸವ ಆಯ್ಕೆ ಸಮಿತಿ ಈ ಮೂರು ರಾಜ್ಯಗಳ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿ, ಮಹಾತ್ಮರಿಗೆ ಅಪಮಾನ ಮಾಡಿದೆ’ ಎಂದು ಆರೋಪಿಸಿದರು.
‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಕ್ಕೂಟ ವ್ಯವಸ್ಥೆ ಬಗ್ಗೆ ಗೌರವವಿಲ್ಲ. ಇದರಿಂದ ದೇಶದ ಜನರು ಆ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ’ ಎಂದು ದೂರಿದರು.
‘ಅವರು ದೇಶದ ಜನರ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಕೇಂದ್ರ ಸರ್ಕಾರದ ಈ ದುಷ್ಟ ನೀತಿಯ ವಿರುದ್ಧವಾಗಿ ನಿರಂತವಾಗಿ ಹೋರಾಟ ಮುಂದುವರಿಸುತ್ತೇವೆ’ ಎಂದು ಹೇಳಿದರು.