ಬೆಳಗಾವಿ: ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತದಲ್ಲಿ ಶುಕ್ರವಾರ ತಡರಾತ್ರಿ ವಿವಿಧ ಸಂಘಟನೆಗಳು ಪ್ರತಿಭಟಿಸಿದ ವೇಳೆ ಕಿಡಿಗೇಡಿಗಳು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸ್ ಜೀಪ್ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳ ಗಾಜು ಒಡೆದಿದೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಧರ್ಮವೀರ ಸಂಭಾಜಿ ವೃತ್ತದಲ್ಲಿ ಜಮಾಯಿಸಿದ ಅವರು, ಛತ್ರಪತಿ ಶಿವಾಜಿಗೆ ಅವಮಾನ ಮಾಡಿರುವುದನ್ನು ಖಂಡಿಸಿದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಪ್ರತಿಭಟನೆ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಹರಸಾಹಸ ನಡೆಸಿದರು.
ನೆರೆದಿದ್ದವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು
ಸ್ಥಳದಿಂದ ತೆರಳುವ ವೇಳೆ ಕೆಲವರು ರಾಮಲಿಂಗಖಿಂಡ್ ಗಲ್ಲಿಯಲ್ಲಿ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ. ರಸ್ತೆ ಬದಿ ನಿಂತಿದ್ದ ವಾಹನಗಳ ಗಾಜು ಜಖಂಗೊಳಿಸಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಿದ್ದಾರೆ.
ಪ್ರತಿಭಟನೆಯಲ್ಲಿ ಶ್ರೀರಾಮಸೇನಾ ಹಿಂದೂಸ್ತಾನ, ಎಂಇಎಸ್, ಶಿವಸೇನಾ ಕಾರ್ಯಕರ್ತರು ಹಾಗೂ ಶಿವಾಜಿ ಅಭಿಮಾನಿಗಳು ಪಾಲ್ಗೊಂಡಿದ್ದರು.
ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಶಿವಾಜಿಗೆ ಅವಮಾನ ಖಂಡಿಸಿ ಇಂದೂ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲು ಸಂಘಟನೆಗಳು ನಿರ್ಧರಿಸಿವೆ.