ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಟ್ಟೆ–ಲೋಟ ಬಡಿದು ಸಾರಿಗೆ ಸಂಸ್ಥೆ ನೌಕರರ ಕುಟುಂಬದವರ ಪ್ರತಿಭಟನೆ

ಮುಂದುವರಿದ ಸಾರಿಗೆ ಸಂಸ್ಥೆ ನೌಕರರ ಮುಷ್ಕರ
Last Updated 12 ಏಪ್ರಿಲ್ 2021, 12:47 IST
ಅಕ್ಷರ ಗಾತ್ರ

ಬೆಳಗಾವಿ: ಸಾರಿಗೆ ಸಂಸ್ಥೆಯ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವಂತೆ ಆಗ್ರಹಿಸಿ ಎನ್‌ಡಬ್ಲ್ಯುಕೆಆರ್‌ಟಿಸಿಯ ಕೆಲವು ನೌಕರರ ಕುಟುಂಬದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ತಟ್ಟೆ–ಲೋಟ ಬಡಿದು ಸೋಮವಾರ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿರುದ್ಧ ಘೋಷಣೆ ಕೂಗಿದರು. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

‘ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ. ಆದರೆ, ಸರ್ಕಾರ ನಮ್ಮ ಸಂಕಷ್ಟವನ್ನೇ ಆಲಿಸುತ್ತಿಲ್ಲ. ನೌಕರರಿಗೆ ಮಾರ್ಚ್ ತಿಂಗಳ ವೇತನವನ್ನು ಪಾವತಿಸದೆ ಇರುವುದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಮಕ್ಕಳ ಶೈಕ್ಷಣಿಕ ವೆಚ್ಚ ಭರಿಸಲು, ಹಿರಿಯರಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಹಣಕ್ಕಾಗಿ ಪರದಾಡುವಂತಾಗಿದೆ. ಯುಗಾದಿ ಹಬ್ಬಕ್ಕೆ ಮಕ್ಕಳಿಗೆ ಹೊಸ ಬಟ್ಟೆಯನ್ನೂ ಖರೀದಿಸಿಲ್ಲ’ ಎಂದು ನೌಕರರ ಪತ್ನಿಯರು ಅಳಲು ತೋಡಿಕೊಂಡರು.

‘ಸಾರಿಗೆ ಸಂಸ್ಥೆಯು ಪತಿಗೆ ನೀಡುತ್ತಿರುವ ಸಂಬಳ ಸಾಕಾಗುತ್ತಿಲ್ಲ. ನನ್ನ ಮಗನ ಹೃದಯ ಚಿಕಿತ್ಸೆಗಾಗಿ ಹಣ ಹೊಂದಿಸಲು ಪರದಾಡಿದ್ದೇವೆ. ಆದರೆ, ಸರ್ಕಾರ ವೇತನ ಪರಿಷ್ಕರಿಸುವ ಬದಲಿಗೆ, ವರ್ಗಾವಣೆ ಶಿಕ್ಷೆ ನೀಡುತ್ತಿದೆ’ ಎಂದು ಸರಿತಾ ಎನ್ನುವವರು ಕಣ್ಣೀರಿಟ್ಟರು.

ಈ ನಡುವೆ, ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಸೋಮವಾರ 6ನೇ ದಿನಕ್ಕೆ ಕಾಲಿಟ್ಟಿದೆ. ‘ದಿನೇ ದಿನೇ ಕೆಲಸಕ್ಕೆ ಹಾಜರಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ 92 ಮಂದಿ ಕರ್ತವ್ಯ ನಿರ್ವಹಿಸಿದರು. 61 ಬಸ್‌ಗಳು ಕಾರ್ಯಾಚರಣೆ ನಡೆಸಿವೆ. ಇವುಗಳಲ್ಲಿ 32 ಬಸ್‌ಗಳನ್ನು ಚುನಾವಣಾ ತರಬೇತಿಗೆ ನಿಯೋಜನೆಗೊಂಡವರನ್ನು ಕರೆತರುವುದಕ್ಕಾಗಿ ನೀಡಲಾಗಿದೆ’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ‘ಪ್ರಜಾವಾಣಿ’ಗೆ ತಿಳಿಸಿದರು.

ಬಹುತೇಕ ನೌಕರರು ಕರ್ತವ್ಯದಿಂದ ದೂರ ಉಳಿದಿರುವುದರಿಂದ ಬಸ್‌ಗಳ ಕಾರ್ಯಾಚರಣೆ ವ್ಯವಸ್ಥೆ ಹಳಿಗೆ ಬಂದಿಲ್ಲ. ಇದರಿಂದಾಗಿ ಪ್ರಯಾಣಿಕರ ಪರದಾಟವೂ ಮುಂದುವರಿದಿದೆ. ಕೇಂದ್ರ ಬಸ್ ನಿಲ್ದಾಣದಿಂದ ಕೆಲವು ಖಾಸಗಿ ವಾಹನಗಳು ಕಾರ್ಯಾಚರಿಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT