ಬೆಳಗಾವಿ: ‘ಮೇಕೆದಾಟು ಮತ್ತು ಮಹಾದಾಯಿ ಯೋಜನೆಗಳನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಸುವರ್ಣ ವಿಧಾನಸೌಧ ಬಳಿಯ ಕೊಂಡಸಕೊಪ್ಪದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
‘ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆಯನ್ನು ಶೀಘ್ರದಲ್ಲೇ ಕೈಗೆತ್ತಿಗೊಳ್ಳಬೇಕು. ಸವದತ್ತಿ ತಾಲ್ಲೂಕಿನಲ್ಲಿ ನೀರಾವರಿಯಿಂದ ವಂಚಿತವಾದ ಗ್ರಾಮಗಳಿಗೆ ಶಾಶ್ವತ ಯೋಜನೆ ರೂಪಿಸಬೇಕು. ಸತ್ತಿಗೇರಿ ಯೋಜನೆ ಆರಂಭಿಸಬೇಕು’ ಎಂದು ಒತ್ತಾಯಿಸಿದರು.
‘ರೈತರು ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಪಡೆದ ಯಂತ್ರೋಪಕರಣಗಳು, ಟ್ರ್ಯಾಕ್ಟರ್, ಜಾನುವಾರು ಹಾಗೂ ಬೆಳೆ ಮೊದಲಾದ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.
‘ನೆರೆ ಮತ್ತು ಅತಿವೃಷ್ಟಿಯಿಂದ ಹಾನಿ ಅನುಭವಿಸಿದವರಿಗೆ ಕೂಡಲೇ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.
‘ಕೇಂದ್ರ ಸರ್ಕಾರದರ ಮಾದರಿಯಲ್ಲಿ ರಾಜ್ಯದಲ್ಲೂ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆ ಸಲುವಾಗಿ ಸಣ್ಣ ರೈತರ ಮತ್ತು ಹಿಂದುಳಿದ ಸಮಾಜದವರ ಕೃಷಿ ಭೂಮಿಯನ್ನು ಸರ್ಕಾರ ವಶಪಡಿಸಿಕೊಂಡಿದೆ. ಭೂಮಿ ಕಳೆದುಕೊಂಡವರಿಗೆ ಉದ್ಯೋಗ ಕಲ್ಪಿಸಬೇಕು’ ಎಂದು ಕೋರಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ವಾಸುದೇವ ಮೇಟಿ, ಮುಖಂಡರಾದ ಪ್ರಶಾಂತಗೌಡ ಪಾಟೀಲ, ಸವಿತಾ ಮೂಗಯ್ಯನವರ, ಶಾರದಾ, ಜಯಶ್ರೀ, ಗೌಡಪ್ಪಗೌಡ ಪಾಟೀಲ, ಸಂಗಣ್ಣ ಬಾಗೇವಾಡಿ, ಬಸವರಾಜ ಬಿಜ್ಜುರ ಪಾಲ್ಗೊಂಡಿದ್ದರು.