ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗುರುವಾರ ಬರಬೇಕಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಅವರು, ಗಡಿ ವಿವಾದ ತಾರಕಕ್ಕೇರಿದ ಕಾರಣ ತಮ್ಮ ಪ್ರವಾಸದ ಮಾರ್ಗ ಬದಲಿಸಿದರು.
ಮಹಾರಾಷ್ಟ್ರದ ಸಾವಂತವಾಡಿಯಲ್ಲಿ ಬುಧವಾರ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಗುರುವಾರ ರಸ್ತೆ ಮೂಲಕ ಬೆಳಗಾವಿಗೆ ಬಂದು, ಇಲ್ಲಿಂದ ವಿಮಾನದ ಮೂಲಕ ಮುಂಬೈಗೆ ತೆರಳುವವರಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಲು ಎಂಇಎಸ್ ಮುಖಂಡರು ಸಿದ್ಧತೆ ಮಾಡಿಕೊಂಡಿದ್ದರು.
ಆದರೆ, ‘ಗಡಿ ವಿಚಾರವಾಗಿ ನಡೆಯುತ್ತಿರುವ ಗಲಾಟೆಯ ರಗಳೆಯೇ ಬೇಡ’ ಎಂದು ಅವರು ಗೋವಾ ಮೂಲಕ ಮುಂಬೈಗೆ ತೆರಳಿದರು ಎಂದು ಎಂಇಎಸ್ ಹಿರಿಯ ಮುಖಂಡರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.