ಬೆಳಗಾವಿ: ‘ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ. ಇದರ ಜೊತೆ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಕ್ರಮಕೈಗೊಳ್ಳಿ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನವದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಸಲಹೆ ನೀಡಿದರು.
ಕೇಂದ್ರ ಸರ್ಕಾರದ ವಿವಿಧ ಸಚಿವರನ್ನು ಭೇಟಿಯಾಗಿ, ರಾಜ್ಯದ ಜಲಸಂಪನ್ಮೂಲ ಯೋಜನೆಗಳ ಬಗ್ಗೆ ಚರ್ಚಿಸಲು ರಮೇಶ ಜಾರಕಿಹೊಳಿ ಅವರು ನವದೆಹಲಿಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ನಡ್ಡಾ ಅವರನ್ನೂ ಭೇಟಿಯಾದರು.
‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಪಕ್ಷದ ಕಾರ್ಯಕರ್ತರು ತೊಡಗಿದ್ದಾರೆ’ ಎಂದು ರಮೇಶ ಅವರು ಭರವಸೆ ನೀಡಿದರು.
‘ಕೃಷ್ಣಾ, ಕಾವೇರಿ ಸೇರಿದಂತೆ ವಿವಿಧ ನದಿಗಳ ರಾಜ್ಯದ ಪಾಲಿನ ನೀರನ್ನು ಬಳಸಲು ಅನುಕೂಲವಾಗುವಂತೆ ರಾಷ್ಟ್ರೀಯ ಜಲ ನೀತಿ ರೂಪಿಸಬೇಕು’ ಎಂದು ಅವರು ಕೋರಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಜೊತೆಗಿದ್ದರು.