ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಮಾರ್ಚ್ 20ರಂದು ನಡೆಯಲಿದೆ. ಈ ಬಾರಿ ಇಬ್ಬರಿಗೆ ಗೌರವ ಡಾಕ್ಟರೇಟ್, 27 ಪಿಎಚ್ಡಿ ಹಾಗೂ 47,185 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರ ಗೌಡ ತಿಳಿಸಿದರು.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರಿಗೆ ಸಮಾಜ ಸೇವೆಯನ್ನು ಪರಿಗಣಿಸಿ, ಮರಣೋತ್ತರವಾಗಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿನ ಕೊಡುಗೆ ಪರಿಗಣಿಸಿ ಮಲ್ಲೇಪುರಂ ಜಿ. ವೆಂಕಟೇಶ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದರು.
ವಿವಿಧ ಕಾಲೇಜು ಹಾಗೂ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಾಪಿಸಿದ ಎಲ್ಲ 12 ಚಿನ್ನದ ಪದಕಗಳನ್ನೂ ಈ ಬಾರಿ ವಿದ್ಯಾರ್ಥಿನಿಯರೇ ಪಡೆದುಕೊಂಡಿದ್ದು ವಿಶೇಷ. ಒಟ್ಟು 149 ರ್ಯಾಂಕ್ಗಳನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ.ತಿಮ್ಮೇಗೌಡ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.