ಬೆಳಗಾವಿ: ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಕೇಂದ್ರ ತೆರೆದಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಸ್ಥಳೀಯರು ಪ್ರತಿಭಟಿಸಿ ವೈದ್ಯ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಇದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಶಹಾಪುರನ ‘ಮೈ ಆಸ್ಪತ್ರೆ’ಯ ವೈದ್ಯ ವಿನಾಯಕ ಭಾತಖಾಂಡೆ ಹಾಗೂ ಸಿಬ್ಬಂದಿ ಲಕ್ಷ್ಮಿ ಜಾಧವ ಎನ್ನುವವರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಹಲ್ಲೆ ನಡೆಸಿದವರು ಎನ್ನಲಾದ ನಾಲ್ವರು ಸೇರಿದಂತೆ ಗುಂಪುಗೂಡಿದ್ದ 50 ಮಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಹಾಪುರ ಪೊಲೀಸ್ ಠಾಣೆಯಲ್ಲಿ ಡಾ.ಮಿಲಿಂದ್ ಹಲಗೇಕರ ಸೋಮವಾರ ದೂರು ದಾಖಲಿಸಿದ್ದಾರೆ.
‘ಜನವಸತಿ ಪ್ರದೇಶದಲ್ಲಿ ಕೇಂದ್ರ ಆರಂಭಿಸಿರುವುದರಿಂದ ನಮಗೂ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಅವರ ಸಂಬಂಧಿಕರ ಈ ಭಾಗದಲ್ಲಿ ತಿರುಗಾಡುತ್ತಿದ್ದಾರೆ. ಹೀಗಾಗಿ, ಸ್ಥಳಾಂತರಿಸಬೇಕು’ ಎನ್ನುವುದು ಪ್ರತಿಭಟನಾಕಾರರು ಆಗ್ರಹಿಸಿದರು. ವೈದ್ಯಕೀಯ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದು ಎಂದು ತಿಳಿದುಬಂದಿದೆ.
ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಐಎಂಎ ವತಿಯಿಂದ ಸಭೆ ನಡೆಸಲಾಯಿತು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಹಾಗೂ ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಜಿಲ್ಲಾದಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.