ರಾಮದುರ್ಗ: ಸಮಾಜದ ಮುಖಂಡರು ಒಗ್ಗಟ್ಟಿನಿಂದ ಶ್ರಮಿಸಿದರೆ ಸಮುದಾಯದ ಪ್ರಗತಿ ಸಾಧ್ಯ ಎಂದು ಸಾರಿಗೆ ಮತ್ತು ಪ್ರವಾಸೋದ್ಯಮ ಸಚಿವ ರಾಮಲಿಂಗಾರಡ್ಡಿ ಹೇಳಿದರು.
ರಾಮದುರ್ಗ ತಾಲ್ಲೂಕಿನ ಚಿಪ್ಪಲಕಟ್ಟಿ ಗ್ರಾಮದಲ್ಲಿ ರಡ್ಡಿ ಸಮಾಜದವರು ಏರ್ಪಡಿಸಿದ್ದ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಒಗ್ಗಟ್ಟಿನ ಫಲವಾಗಿ ವೇಮನ, ಮಲ್ಲಮ್ಮನ ಜಯಂತಿಗಳನ್ನು ಸರ್ಕಾರದಿಂದ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಡ್ಡಿ ಸಮುದಾಯದ ಅನೇಕ ಬೇಡಿಕೆಗಳನ್ನು ಈಡೆರಿಸಿದ್ದಾರೆ. ವೇಮನ ಪೀಠ, ಕೆ.ಸಿ. ರೆಡ್ಡಿ ಪುತ್ಥಳಿ ನಿರ್ಮಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಘಟಿತ ಹೋರಾಟದ ಮೂಲಕ ಸಮುದಾಯದ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ವರ್ಷದಲ್ಲಿ ಬಾಗಲಕೋಟೆ ಅಥವಾ ವಿಜಯಪುರ ಜಿಲ್ಲೆಗಳ ಮಧ್ಯಭಾಗದಲ್ಲಿ ಅಖಿಲ ಭಾರತ ರಡ್ಡಿ ಸಮಾವೇಶವನ್ನು ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕ ಸೇರಿದಂತೆ ಆಂಧ್ರ, ಮಹಾರಾಷ್ಟ್ರ, ತೆಲಂಗಾಣ ಒಳಗೊಂಡು ಅನೇಕ ರಾಜ್ಯಗಳ ರಡ್ಡಿ ಬಂಧುಗಳನ್ನು ಒಗ್ಗೂಡಿಸಲಾಗುವುದು ಎಂದು ಹೇಳಿದರು.
ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆ ಮಾಡಬೇಕು. ಇದರಿಂದ ಕೇವಲ ರಡ್ಡಿ ಸಮುದಾಯದ ಮಕ್ಕಳಿಗೆ ಅನುಕೂಲತೆ ಜೊತೆಗೆ ಇತರೆ ಸಮುದಾಯದ ಮಕ್ಕಳಿಗೂ ಉತ್ತಮ ಶಿಕ್ಷಣ ದೊರಕಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಪ್ರಮುಖರು ಚಿಂತನೆ ನಡೆಸಬೇಕು ಎಂದು ಹೇಳಿದರು.
ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಮಾತನಾಡಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಜೀವನ ಚರಿತ್ರೆ ಅತ್ಯಂತ ಮಹತ್ವದ್ದಾಗಿವೆ.. ಇಂದಿನ ಮಹಿಳೆಯರು ಮಲ್ಲಮ್ಮನ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ಕುಟುಂಬ ಮಾಡಿಕೊಳ್ಳಬೇಕು ಎಂದರು.
ಮಾಜಿ ಸಚಿವ ಹಾಗೂ ಬಾಗಲಕೋಟೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಬೆಂಗಳೂರ ರೆಡ್ಡಿ ಜನಸಂಘದ ನಿರ್ದೇಶಕರಾದ ಶೇಖರ ರೆಡ್ಡಿ, ಕೃಷ್ಣಾರೆಡ್ಡಿ ಸೇರಿದಂತೆ ಅನೇಕರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ರಡ್ಡಿ ಸಮಾಜದ ತಾಲ್ಲೂಕು ಅಧ್ಯಕ್ಷ ಜ್ಞಾನೇಶ್ವರ ಮೇಲಪ್ಪಗೋಳ ಅಧ್ಯಕ್ಷತೆ ವಹಿಸಿದ್ದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಸಂತ ಕುಲಗೋಡ ಸ್ವಾಗತಿಸಿದರು. ಆರ್.ಎಸ್. ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಅಶೋಕ ಬೂದಿ ವಂದಿಸಿದರು.