ಬೆಳಗಾವಿ: ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಅವರ ಕೊಡುಗೆ ಅಪಾರವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ನಗರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಬುಧವಾರ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕಿತ್ತೂರು ಸಂಸ್ಥಾನದ ರಕ್ಷಣೆಗೆ ನಿಂತ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದರು. ದೇಶದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಅನೇಕ ಮಹನೀಯರು ಪ್ರಾಣ ತ್ಯಾಗ ಮಾಡಿದ್ದು, ಅದರಲ್ಲಿ ರಾಯಣ್ಣ ಪಾತ್ರ ಬಹಳ ಮಹತ್ವದಾಗಿದೆ’ ಎಂದು ಹೇಳಿದರು.
‘ಕಿತ್ತೂರು ನಾಡನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ರಾಯಣ್ಣಗೆ ಸಲ್ಲುತ್ತದೆ. ಭವಿಷ್ಯದಲ್ಲಿ ಎಲ್ಲ ಯುವ ಪೀಳಿಗೆಯಲ್ಲಿ ರಾಯಣ್ಣ ನೆನಪು ಶಾಶ್ವತವಾಗಿ ಉಳಿಯಲಿದೆ. ಆ ಹೆಸರು ಜನ್ಮದಿನ ಹಾಗೂ ಹುತಾತ್ಮ ದಿನಾಚರಣೆಗೆ ಮಾತ್ರ ಸೀಮಿತವಲ್ಲ. ಅದನ್ನು ಚಿರಸ್ಥಾಯಿಯಾಗಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಅವರ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ನಿರ್ಮಾಣ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೀಘ್ರದಲ್ಲೇ ಉದ್ಘಾಟನೆ ಮಾಡಲಿದ್ದಾರೆ’ ಎಂದು ತಿಳಿಸಿದರು.
‘ರಾಯಣ್ಣನ ಜೀವನ ಚರಿತ್ರೆ ಯುವಪೀಳಿಗೆಗೆ ಪ್ರೇರಣೆ ಮತ್ತು ಶಕ್ತಿಯಾಗಿದೆ’ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇದ್ದಾರೆ.