‘ಸಚಿವ ಸತೀಶ ಜಾರಕಿಹೊಳಿ ಅವರು ಚಿಕ್ಕೋಡಿ ಭಾಗದ ಎಲ್ಲ ನಾಯಕರನ್ನು ತುಳಿಯುತ್ತಿದ್ದಾರೆ. ಮೇಲಾಗಿ, ನಮ್ಮ ಸಮುದಾಯದ ಮುಖಂಡರನ್ನು ನಿರ್ಣಾಮ ಮಾಡುತ್ತಿದ್ದಾರೆ’ ಎಂದು ಕುಡಚಿಯ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣವರ ಕಿಡಿ ಕಾರಿದರು. ‘ಲೋಕಸಭೆ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ ಕೆಲಸ ಮಾಡಿಲ್ಲ ಎಂದು ಸತೀಶ ಆರೋಪಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ಗೆ ದೂರು ನೀಡುವುದಾಗಿಯೂ ಹೇಳಿದ್ದಾರೆ. ಇಂಥ ಯಾವುದೇ ದೂರಿಗೂ ನಾನು ದಾಖಲೆ ಸಮೇತ ಉತ್ತರ ಕೊಡಲು ಸಿದ್ಧನಿದ್ದೇನೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.