ಗೋಕಾಕ: ‘ಮುಂಗಾರು ಹಂಗಾಮಿನಲ್ಲಿ ಕೃಷಿಗೆ ಸಂಬಂಧಪಟ್ಟಂತೆ ಬಿತ್ತನೆಬೀಜ ಮತ್ತು ರಸಗೊಬ್ಬರ ಮೊದಲಾದ ಪರಿಕರಗಳನ್ನು ಕೃಷಿ ಇಲಾಖೆ ಕಲ್ಪಿಸಲಿದ್ದು, ರೈತರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸಲಹೆ ನೀಡಿದರು.
ಇಲ್ಲಿನ ತಮ್ಮ ಕಾರ್ಯಾಲಯದ ಆವರಣದಲ್ಲಿ ಭಾನುವಾರ ಕೃಷಿ ಇಲಾಖೆಯಿಂದ ನೀಡಲಾದ ಬೀಜಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು.
‘ಮುಖ್ಯಮಂತ್ರಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ, ರೈತರ ಹಿತ ಕಾಪಾಡುತ್ತಿದ್ದಾರೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ರಾಜ್ಯದಲ್ಲಿ ಸಾಕಷ್ಟಿದೆ. ಕೊರೊನಾ ತಡೆಗಟ್ಟಲು ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ರೈತ ಸಂಪರ್ಕ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗಿದೆ’ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ತುಕಾರಾಮ ಕಾಗಲ, ಮಡ್ಡೆಪ್ಪ ತೋಳಿನವರ, ನಗರಸಭೆ ಸದಸ್ಯ ಎಸ್.ಎ. ಕೋತವಾಲ, ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ್ ಇದ್ದರು.