ಗೋಕಾಕ: ‘ಜಗತ್ತಿನ ಅಗ್ರಗಣ್ಯ ನಾಯಕರಾಗಿ ಹೊರಹೊಮ್ಮುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮ ದಿನದ ಅಂಗವಾಗಿ ಸೆ.17ರಿಂದ (ಶುಕ್ರವಾರ) ನಿರಂತರವಾಗಿ 20 ದಿನಗಳವರೆಗೆ ಸೇವಾ ಮತ್ತು ಸಮರ್ಪಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ತಿಳಿಸಿದರು.
ಇಲ್ಲಿನ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ಸೇವಾ ಮತ್ತು ಸಮರ್ಪಣ ಕಾರ್ಯಕ್ರಮದ ಮೂಲಕ ಬಿಜೆಪಿ ಕಾರ್ಯಕರ್ತರು ದೇಶದ ಜನರ ಸೇವೆ ಮಾಡಲು ಸನ್ನದ್ಧರಾಗಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ಕಾರ್ಯಕ್ಷಮತೆ ಮೂಲಕ ಶೋಷಿತರು, ಬಡವರು, ರೈತರು ಮತ್ತು ಅಸಹಾಯಕರ ಆಧಾರ ಸ್ತಂಭವಾಗಿದ್ದಾರೆ’ ಎಂದು ಬಣ್ಣಿಸಿದರು.
‘ಪ್ರಧಾನಿ ಜನ್ಮ ದಿನದ ಅಂಗವಾಗಿ ಆರೋಗ್ಯ ಶಿಬಿರ, ರಕ್ತ ದಾನ ಶಿಬಿರ, ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ, ಕೋವಿಡ್ ಲಸಿಕಾ ಶಿಬಿರ, ಆಹಾರ–ಹಣ್ಣು ವಿತರಣೆ ಸೇರಿದಂತೆ ಹಲವು ಸೇವಾ ಕಾರ್ಯಕ್ರಮಗಳನ್ನು ಕಾರ್ಯಕರ್ತರು ಹಮ್ಮಿಕೊಂಡಿದ್ದಾರೆ’ ಎಂದು ತಿಳಿಸಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮಣ್ಣವರ, ಶಾಸಕರ ಸಹಾಯಕ ಸುರೇಶ ಸನದಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರೇಮಾ ಭಂಡಾರಿ, ರೈತ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.