ಬೆಳಗಾವಿ: ಮಹತ್ವದ ಇಲಾಖೆಗಳ ಕಚೇರಿಗಳನ್ನು ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಶನಿವಾರ ಅವರು ಮಾತನಾಡಿದರು.
ಸುವರ್ಣ ವಿಧಾನಸೌಧವನ್ನು ಆಡಳಿತದ ಶಕ್ತಿ ಕೇಂದ್ರ ಮಾಡಲಾಗುವುದು. ವಿಧಾನಸೌಧದಂತೆ ಸುವರ್ಣ ವಿಧಾನಸೌಧದಲ್ಲೂ ಜನರ ಪರವಾಗಿ ಚಟುವಟಿಕೆಗಳು ನಡೆಯುವಂತೆ ನೋಡಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಸಕ್ಕರೆ ಆಯುಕ್ತರ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸಲಾಗುವುದು. ಈಗಾಗಲೇ ಆದೇಶವಾಗಿದ್ದರೂ ಕೆಲವು ಕಚೇರಿಗಳು ಇಲ್ಲಿಗೆ ಸ್ಥಳಾಂತರವಾಗಿಲ್ಲ. ಅವುಗಳ ಸ್ಥಳಾಂತರಕ್ಕೆ ಮರು ಆದೇಶ ಮಾಡಲಾಗುವುದು ಎಂದು ತಿಳಿಸಿದರು.
ಬಿಮ್ಸ್ (ಜಿಲ್ಲಾಸ್ಪತ್ರೆ) ಸಮಗ್ರ ಸುಧಾರಣೆಗೆ ಕ್ರಮ ವಹಿಸಲಾಗುವುದು. ಇದಕ್ಕಾಗಿ ತಂಡವನ್ನು ಕಳುಹಿಸಿ ವರದಿ ಪಡೆಯಲಾಗುವುದು ಎಂದರು.