ಗೋಕಾಕ (ಬೆಳಗಾವಿ ಜಿಲ್ಲೆ): ಸಿ.ಡಿ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಯ ಇಬ್ಬರು ಅಧಿಕಾರಿಗಳು ಇಲ್ಲಿನ ತಾಲ್ಲೂಕು ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ಕೋವಿಡ್–19ನಿಂದಾಗಿ ದಾಖಲಾಗಿರುವ ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದರು.
ಅವರ ಆರೋಗ್ಯ ವರದಿ ಪರಿಶೀಲಿಸಿದರು. ಆಸ್ಪತ್ರೆಯಿಂದ ಬಿಡುಗಡೆಗೂ ಮುನ್ನವೇ ಮಾಹಿತಿ ನೀಡಬೇಕು ಎಂದು ವೈದ್ಯಾಧಿಕಾರಿಗೆ ಸೂಚಿಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ‘ಎಸ್ಐಟಿ ಅಧಿಕಾರಿಗಳು ರಮೇಶ ಅವರ ಆರೋಗ್ಯ ಸ್ಥಿತಿಯ ಮಾಹಿತಿ ಪಡೆದರು. ಅವರನ್ನು ಬಿಡುಗಡೆ ಮಾಡುವ ಪೂರ್ವದಲ್ಲಿ ತಿಳಿಸುವಂತೆ ಸೂಚಿಸಿದ್ದಾರೆ.
ಸೋಂಕಿತರಿಗೆ ಕೊಡುತ್ತಿರುವ ಚಿಕಿತ್ಸೆಯ ಸಂಪೂರ್ಣ ಮಾಹಿತಿಯನ್ನೂ ನೀಡಿದ್ದೇವೆ. ರೋಗಿಯನ್ನು ಅವರು ಭೇಟಿಯಾಗಿಲ್ಲ. ನಮ್ಮೊಂದಿಗೆ ಒಂದು ಗಂಟೆ ಚರ್ಚಿಸಿದರು’ ಎಂದು ತಿಳಿಸಿದರು.
‘ರೋಗಿ ಗುಣಮುಖರಾಗದೆ ಬಿಡುಗಡೆ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.