ಬೆಳಗಾವಿ: ‘ನಗರದಲ್ಲಿ ಶುಕ್ರವಾರ ತಡರಾತ್ರಿ ನಡೆದ ಕಲ್ಲು ತೂರಾಟ ಘಟನೆಗೆ ಪೊಲೀಸ್ ವೈಫಲ್ಯವೇ ಕಾರಣ’ ಎಂದು ಇಲ್ಲಿನ ದಕ್ಷಿಣ ಮತ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಆರೋಪಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಈ ವಿಷಯವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇನೆ’ ಎಂದರು.
‘ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರಿಗೆ ಅಪಮಾನ ಮಾಡಿದ್ದನ್ನು ಮತ್ತು ನಗರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ್ದನ್ನು ಖಂಡಿಸುತ್ತೇನೆ’ ಎಂದು ತಿಳಿಸಿದರು.
‘ಇಲ್ಲಿ ನಡೆದ ಘಟನೆಯ ಹಿಂದೆ ರಾಜಕೀಯ ಷಡ್ಯಂತ್ರವಿದೆ. ಅದನ್ನು ಅರಿತುಕೊಳ್ಳಬೇಕು. ಘಟನೆಗೆ ಕಾರಣದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಪರೋಕ್ಷವಾಗಿ ಎಂಇಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅವರು ಎಸ್ಪಿಎಂ ರಸ್ತೆಯ ಉದ್ಯಾನದಲ್ಲಿರುವ ಶಿವಾಜಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಮೀಪದ ಉದ್ಯಾನದಲ್ಲಿನ ರಾಯಣ್ಣ ಪ್ರತಿಮೆಗಳಿಗೆ ಕ್ಷೀರಾಭಿಷೇಕ, ಮಾಲಾರ್ಪಣೆ ಮಾಡಿದರು.